28 ಡಿಸೆಂಬರ್ 2012

ಊಟದಲ್ಲಿದೆ ಪ್ರೀತಿಯ ಬೆಸುಗೆ. . .!



 ಅನೇಕ ದಿನಗಳಾಯಿತು , ಈ ಕಡೆ ಬರದೆ. ಅದ್ಯಾಕೋ ಏನೋ ಮನಸ್ಸು ಕಳೆದ ಕೆಲವು ದಿನಗಳಿಂದ ಸುಮ್ಮನೆ ಯೋಚಿಸುತ್ತಲೇ ಇತ್ತು. ಅಬ್ಬಾ ಇಮ್ದು ಬಿಡುವು ಸಿಕ್ಕಿತು.

                 * * * * * *

 ಮೊನ್ನೆ ತಡವಾಗಿತ್ತು ಊಟ ಮಾಡುವಾಗ. ಕಾರಣ ಇಷ್ಟೇ , ನನ್ನ ಬಾಲ್ಯ ಸ್ನೇಹಿತನೊಬ್ಬ ದೂರವಾಣಿಯಲ್ಲಿ  ಈಗ ಬಂದೆ ಜೊತೆಯಲ್ಲೇ ಊಟ ಮಾಡೋಣ ಅಂದಿದ್ದ. ಆಗಲೇ ಸಮಯ ಒಂದೂವರೆ ಕಳೆದಿತ್ತು.ನನಗೆ ಹಸಿವು  ಜೋರಾಗಿದ್ದರೂ , ಆ ಕ್ಷಣಕ್ಕೆ ಹಸಿವು  ನಿಂತೇ ಹೋಗಿತ್ತು , ಬಾಲ್ಯದ ಆ ಕ್ಷಣಗಳು ನೆನೆಪಾಗಿತ್ತು. ಅಂತೂ   ಎರಡು ಗಂಟೆಯ ಹೊತ್ತಿಗೆ ಬಾಲ್ಯದ ದಿನಗಳ ನೆನಪಿಸುತ್ತಾ , ಊಟದ ಹೊತ್ತಲ್ಲಿ  ಕಾಲ ಕಳೆದೆವು. ಅಂದಿನ ಊಟದ ಹೊತ್ತು , ಮಧುರವಾದ ನೆನಪಿಗೆ ನಾಂದಿಯಾಯಿತು.

                             * *

 ಅಂದು  ರಾತ್ರಿ ಮೆನೆಗೆ ಬರುವಾಗ ತಡವಾಗಿತ್ತು , ರಾತ್ರಿ ೧೦ ಕಳೆದಿತ್ತು. ಅಮ್ಮ ಮತ್ತು ಪತ್ನಿ ಆಗಲೂ ಕಾಯುತ್ತಿದ್ದರೂ ಒಂದಷ್ಟು ದೂರವಾಣಿ ಕರೆ ಮಾಡುತ್ತಾ, "ಎಲ್ಲಿದ್ದೀರಿ . . . ಎಷ್ಟೊತ್ತಿಗೆ ಬರುತ್ತೀರಿ " ಎಂದು ಕೇಳುತ್ತಾ , ಕಾದು ಕುಳಿತಿದ್ದರು , ಊಟಕ್ಕೆ. ಅಂತೂ ರಾತ್ರಿ ೧೦.೩೦ ಕ್ಕೆ ಜೊತೆಯಲ್ಲೇ ಊಟ , ಆ ದಿನದ ಖುಷಿಯ ಸಂದರ್ಭ ಮೆಲುಕು ಹಾಕುತ್ತಾ ,  ಆ ಕ್ಷಣಕ್ಕೆ ನಾಂದಿಯಾದ್ದು ಊಟ.

                                 * *

ಇಂದು ಮಧ್ಯಾಹ್ನ ಭಾವ ಪೋನು ಮಾಡಿ, ಎಲ್ಲಿದ್ದೀರಿ , ಊಟ ಮಾಡೋಣವೇ ಅಂತ ಕೇಳಿದರು , ಇಲ್ಲ, ನನಗೆ ಊಟ ಆಯಿತು ಎಂದಾಗ, ಸರಿ  ಹಾಗಾದರೆ ನಾನೂ ಮನೆಗೆ ಹೋಗುತ್ತೇನೆ , ಎನ್ನುವಾಗ , ಅಲ್ಲಿ ಒಂಟಿತನ ಕಂಡಿತ್ತು.

                                         * *

ಅಂತೆಯೇ ಯಾವಾಗಲಾದರೂ ಜೊತೆಯಾಗುವಾಗ , ಅಚಾನಕ್ ಆಗಿ ಸಿಗುವ ಗೆಳೆಯರು , ಆತ್ಮಿಯರೋ ಸಿಕ್ಕಾಗ, ಬನ್ನಿ ಟೀ ಕುಡಿಯೋಣ , ತಿನ್ನೋಣ ಅಂತಲೂ ಹೇಳುವಾಗ ಅಲ್ಲೊಂದು ಸಂಬಂಧ ಇರುತ್ತದೆ. ಅದಕ್ಕೆ ಆಗ ಜೊತೆಯಾಗುವುದು  ಊಟವೋ  . ಚಹಾವೋ , ಕಾಫಿಯೋ. ಹಾಗಾದರೆ ಆ ಊಟಕ್ಕೆ ಎಷ್ಟೊಂದು ಶಕ್ತಿ ಇದೆ. ಸಂಬಂಧವನ್ನು ಉಳಿಸುವ , ಬೆಳೆಸುವ  ಆ ಮಧುರ  ಕ್ಷಣ ನೆನಪಿಸುವ ಸಂದರ್ಭ ಈಗ ಅಪರೂಪವೇ ಅಂತ ಕೆಲವೊಮ್ಮೆ ಅನಿಸಿದ್ದಿದೆ. ಹಾಗೆಯೇ ಕೆಲವೊಮ್ಮೆ ಏಕಾಂಗಿಯಾದಾಗ ಉಪವಾಸ ಇದ್ದ ಸಂದರ್ಭವೂ ಇದೆ. ಇದು  ಅನೇಕರ ಅನುಭವವೂ ಹೌದು.


ಅಂತಹ ಊಟದಲ್ಲಿ ,ಉಣ್ಣುವ ಸಂದರ್ಭದಲ್ಲಿ ನಮಗಾಗಿ  ಅಲ್ಲಿ ಮನೆಯಲ್ಲಿ ಪತ್ನಿಯೋ , ಅಮ್ಮನೋ , ಗೆಳೆಯನೋ ಅಥವಾ ಇನ್ಯಾರೋ ಕಾಯುತ್ತಾರಲ್ಲಾ , ನಾವು ಅಣ್ಣ , ತಮ್ಮ, ಭಾವ, ಗೆಳೆಯ ಅಂತ ಯಾರಿಗೋ ಕಾಯುತ್ತೇವಲ್ಲಾ ಆ ಕಾಯುವಿಕೆಯ ಹಿಂದೆ ನಮಗರಿವಿಲ್ಲದ ಸ್ನೇಹ , ಪ್ರೀತಿ ಇರುತ್ತದೆ. ಅದು ಇಡೀ ಬದುಕಿನುದ್ದಕ್ಕೂ ನಮಗೆ ಸಿಗುತ್ತಲೇ ಇರುತ್ತದೆ.








11 ಅಕ್ಟೋಬರ್ 2012

ಇಲ್ಲಿ ರೇಖೆಯೇ ಚಿತ್ರವಾಗುತ್ತದೆ . . .. . .!




 ‘ಒಮ್ಮೆಯೂ ರಬ್ಬರ್ ಬಳಸದೆ ಮಕ್ಕಳು ಚಿತ್ರ ಬಿಡಿಸುತ್ತಾರೆ’ ಅಂತ  ಕಲಾವಿದ ಮೋಹನ್ ಸೋನಾ, ಮಕ್ಕಳು ಬಿಡಿಸಿದ್ದ ಒಂದಷ್ಟು  ಚಿತ್ರಗಳನ್ನು  ಅತಿಥಿಗಳಿಗೆ ವಿವರಿಸುತ್ತಾ  ಸಾಗುತ್ತಿದ್ದರು. ಒಂದರಿಂದ  ಮತ್ತೊಂದು ಚಿತ್ರ ಅತ್ಯಂತ ವಿಶಿಷ್ಠವಾಗಿತ್ತು. ಇದೆಲ್ಲಾ ಎಳೆಯ ಮಕ್ಕಳು ಬಿಡಿಸಿದ ಚಿತ್ರ, ಎನ್ನುವಾಗ ಆ ಮಕ್ಕಳ ಒಳಗೆ ಇರುವ ಮುಗ್ದತೆ ತರೆದು ಕಾಣುತ್ತಿತ್ತು. ಇದೆಲ್ಲಾ ಕಂಡ್ಡದ್ದು  ಬಾಲವನದಲ್ಲಿ.

ಪುತ್ತೂರಿನ ಬಾಲವನದಲ್ಲಿ  ಡಾ.ಶಿವರಾಮ ಕಾರಂತರ ಜನ್ಮದಿನವನ್ನು  ಆಚರಿಸಲಾಗುತ್ತಿತ್ತು. ಅದೇ ಹೊತ್ತಿಗೆ ಕಾರಂತ ಪ್ರೀತಿಯ ಮಕ್ಕಳಿಗೂ ಚೂರು ಜಾಗ ಕಲ್ಪಿಸಲಾಗಿತ್ತು. ಇದುವರೆಗೆ ಇಲ್ಲದ ಚಿತ್ರಪ್ರದರ್ಶನ ಇಂದು  ಕಂಡುಬಂದಿತು. ನೋಡುವಾಗ ಸಾಮಾನ್ಯ ಎನಿಸಿದರೂ , ಆ ಚಿತ್ರದಲ್ಲಿ ಅಭಿವ್ಯಕ್ತಗೊಳ್ಳುವ ಸಂಗತಿಗಳು  ನಿಜಕ್ಕೂ  ಅಚ್ಚರಿ ಮೂಡಿಸುತ್ತಿತ್ತು. ಕಾರಣ ಅಲ್ಲಿ  ಇದ್ದ ಮಕ್ಕಳು  5 ವರ್ಷದಿಂದ 14 ವಯಸ್ಸಿನ ಪುಟಾಣಿಗಳು.  ಕಳೆದ ಸುಮಾರು  ಎರಡು ವರ್ಷದಿಂದ ಬಾಲವನದಲ್ಲಿ  ಕಲಾವಿದ ಮೋಹನ ಸೋನಾ ಹಾಗೂ  ಚಂದ್ರ ಸೌಗಂಧಿಕಾ ಇವರ ನೇತೃತ್ವದಲ್ಲಿ  ಮಕ್ಕಳಿಗಾಗಿ ಚಿತ್ರ ತರಬೇತಿ ಪ್ರತೀ  ಭಾನುವಾರ    ನಡೆಯುತ್ತಲೇ ಇದೆ. ಕಳೆದ 2 ವರ್ಷದಿಂದ ಭಾನುವಾ ರದಂದು  ಬೆಳಗ್ಗೆ 9 ರಿಂದ ಮಧ್ಯಾಹ್ನದ ವರೆಗೆ   ತರಬೇತಿ ನಡೆಯುತ್ತಿತ್ತು. ಈಗ 26 ಪುಟಾಣಿಗಳು ಇಲ್ಲಿದ್ದಾರೆ.

ಕಾನ್ಸೆಪ್ಟ್ ಮಾತ್ರಾ ; ಚಿತ್ರ ರಚನೆಯೇ ಅಚ್ಚರಿ . .! :

 ಸಾಮಾನ್ಯವಾಗಿ  ಚಿತ್ರ ರಚಿಸುವ ವೇಳೆ ಹತ್ತಾರು ಬಾರಿ ಉಜ್ಜಿ , ತಿದ್ದಿ ತೀಡಿ ಬರೆಯಬೇಕಾಗುತ್ತದೆ. ಆದರೆ ಇಲ್ಲಿ  ಹಾಗಿಲ್ಲ. ಒಮ್ಮೆ ಬರೆದ ಗೆರೆಯನ್ನು  ಅಳಿಸುವ ಹಾಗಿಲ್ಲ,. ಏಕೆಂದರೆ ಪ್ರಕೃತಿಯಲ್ಲಿ ನೇರ ಸರಿಯಾದ ರೇಖ್ಹೆಯೇ ಇಲ್ಲ , ಇನ್ನು ರಬ್ಬರ್ ಬಳಕೆ ಇಲ್ಲವೇ ಇಲ್ಲ , ಏಕೆಂದರೆ ಪರಿಸರ ಎಂದಿಗೂ ತನ್ನ ಸೃಷ್ಠಿಯನ್ನು ಅಳಿಸುವುದಿಲ್ಲ , ನಿಲ್ಲಿಸುವುದಿಲ್ಲ. ಇನ್ನು
ಪ್ರತಿಯೊಂದು ಮಗುವಿನಲ್ಲೂ ಅದರದ್ದೇ   ಆದ ಸಾಮರ್ಥ್ಯ ಇರುತ್ತದೆ , ಮತ್ತು ಅದರ ಮನಸ್ಸಿನ ಒಳಗೆ ಅನೇಕ ವಿಚಾರಗಳೂ   ಇರುತ್ತದೆ , ಇದು  ತಾನಾಗಿಯೇ ಹೊರಬರಬೇಕು ಎಂಬುದು  ಮೋಹನ್ ಸೋನಾ ಹಾಗೂ ತಂಡದ ಉದ್ದೇಶ.  . ಹೀಗಾಗಿ  ಒಂದು ರೇಖೆ ಮತ್ತೊಂದಕ್ಕೆ ಸಹಕಾರಿ ಆಗುತ್ತದೆ.


ಮಕ್ಕಳೇ 57 ಬಗೆಯ ಬಣ್ಣ ತಯಾರಿಸಿದರು.  ..! :



ಇದಂತೂ ಅಚ್ಚರಿಯ ಸಂಗತಿ. ಇಲ್ಲಿ  ಮಕ್ಕಳು ಬಿಡಿಸುವ ಯಾವ ಚಿತ್ರಕ್ಕೂ ಪೇಟೆಯಿಂದ ಬಣ್ಣ ತರುವ ಹಾಗಿಲ್ಲ.ಪರಿಸರದಲ್ಲಿ ಲ‘ವಾಗುವ ಬಣ್ಣಗಳೇ ಚಿತ್ರದ ಬಣ್ಣಗಳು. ಇದಕ್ಕಾಗಿ  ಗ್ರಾಮೀಣ ಪ್ರದೇಶಕ್ಕೆ ವಿದ್ಯಾರ್ಥಿಗಳು ಹೋದಾಗ  ಬೇಂಗ ಮರದ ತೊಗಟೆಯಲ್ಲಿ  ಬರುವ ಕೆಂಪು ಬಣ್ಣ , ತೇಗದ ಮರದ ಎಲೆಯಲ್ಲಿ  ಬರುವ ಕೆಂಪು ಬಣ್ಣ ಇದನ್ನೆಲ್ಲಾ ಪ್ರಾತ್ಯಕ್ಷಿಕೆ ರೂಪದಲ್ಲಿ  ತೋರಿಸಿ ,  ಚಿತ್ರಕ್ಕೆ ಹೊಂದಿಕೆಯಾಗುವ ಬಣ್ಣವನ್ನು  ರಚನೆ ಮಾಡುವಂತೆ ಮಕ್ಕಳಿಗೆ ತಿಳಿಸಲಾಗಿತ್ತು. ಹೀಗಾಗಿ ಮಕ್ಕಳು  ಚಿತ್ರಕ್ಕಾಗಿ ಪೆನ್ನು , ಪೆನ್ಸಿಲ್ ಜೊತೆಗೆ ವಿವಿಧ  ಗಿಡಗಳ ಎಲೆಗಳು , ಸುಣ್ಣ , ಕಾಡಿಗೆ , ಹುಲ್ಲು , ಸೊಪ್ಪು  ಇತ್ಯಾದಿಗಳ ರಸ ತೆಗೆದು ಚಿತ್ರಕ್ಕೆ ಹಚ್ಚುತ್ತಿದ್ದಾರೆ. ಈಗ ಸುಮಾರು  ೫೭ ಬಗೆಯ  ಬಣ್ಣವನ್ನು  ಇದೇ ರೀತಿ  ಗಿಡಗಳ ಎಲೆಗಳಿಂದಲೇ ತಯಾರು ಮಾಡುತ್ತಿದ್ದಾರೆ.ಇದೆಲ್ಲಾ ಮಕ್ಕಳ ಮನಸ್ಸಿನ ಒಳಗೆ ಅಡಗಿರುವ ಸಂಶೋಧಕ ಗುಣ , ಇಡೀ ಚಿತ್ರದ ಮೂಲಕ ಮಕ್ಕಳ ವಯಸ್ಸು  ಹಾಗೂ ಮನಸ್ಸನ್ನು ಅರ್ಥ ಮಾಡಿಕೊಳ್ಳು ಸಾಧ್ಯವಿದೆ ಅಂತಾರೆ ಮೋಹನ ಸೋನಾ.

ಏನೆಲ್ಲಾ ಚಿತ್ರ ಬಿಡಿಸಿದರು ಮಕ್ಕಳು . . :

ಇದು ಇನ್ನೊಂದು ಅಚ್ಚರಿ. ಸಾಮಾನ್ಯವಾಗಿ ಮಕ್ಕಳ ಮನಸ್ಸಿನ ಒಳಗಿನ ಚಿಂತನಾ ಚಟುವಟಿಕೆ ಇಲ್ಲಿ  ಅನಾವರಣಗೊಂಡಿದೆ. ಕಲಾವಿದರ ತಂಡ ಕೇವಲ ಗ್ರಾಮೀಣ ಪ್ರದೇಶಕ್ಕೆ ತೆರಳಿ ಮಕ್ಕಳಿಗೆ ವಿಚಾರ ತಿಳಿಸಿ ನಂತರ ಚಿತ್ರ ಬರೆಯುವುದಕ್ಕೆ ಹೇಳುತ್ತದೆ. ಈ ಸಂದರ್ಭದಲ್ಲಿ  ಮಕ್ಕಳು  ಬಿಡಿಸಿದ ಚಿತ್ರ ಅಚ್ಚರಿಯಾಗುತ್ತದೆ. ಮನೆಯಲ್ಲಿ  ಅಮ್ಮ  ಅಕ್ಕಿ  ಕಡೆಯುವ ಚಿತ್ರ , ಆ ಬೀಸುವ ಕಲ್ಲಿನ ಪಕ್ಕ  ಕುಳಿತಿರುವ ಬೆಕ್ಕು , ಅಲ್ಲೇ ನೀರಿನ ಪಾತ್ರೆ. ಅದಾದ ನಂತರ ಇನ್ನೊಂದು ಚಿತ್ರ ರಬ್ಬರ್ ಟ್ಯಾಪಿಂಗ್ , ತಲೆಯಿಂದ ಹೇನು ಹೆಕ್ಕುವುದು , ಲಗೋರಿ ಆಟ , ಹಟ್ಟಿ , ಸೈಕಲ್ ರಿಪೇರಿ , ಮದುಮಗಳ ಸಿಂಗಾರ , ಅಡುಗೆ. . ಹೀಗೇ ಒಂದಕ್ಕಿಂತ ಮತ್ತೊಂದು ಭಿನ್ನ.

ತಂಡದಲ್ಲಿ  ಯಾರೆಲ್ಲಾ ಇದ್ದಾರೆ :

ಈ ಕಲಾವಿದ ತಂಡದಲ್ಲಿ  ಯಾವುದೇ ಶುಲ್ಕ ಇಲ್ಲದೆ , ಕಲಾವಿದರು ಭಾಗವಹಿಸುತ್ತಾರೆ. ಮೋಹನ್ ಸೋನಾ , ಚಂದ್ರ ಸೌಗಂಧಿಕ , ಎಂ.ಜಿ.ಕಜೆ , ಕುಸುಮಾಧರ ಸೋನಾ , ಗಂಗಾಧರ ನಾಯ್ಕ್  ಕೆಲಸ ಮಾಡುತ್ತಿದ್ದಾರೆ.












12 ಜೂನ್ 2012

ಇಲ್ಲಿ ಅಡಿಕೆ ಮರ ಇದ್ದಕ್ಕಿದ್ದಂತೆ ಸಾಯುತ್ತಿದೆ . . .!





 ಅಡಿಕೆ ಧಾರಣೆ ಏರುಪೇರಿನ ನಡುವೆಯೇ ಈಗ ಸವಣೂರಿನ ಅಡಿಕೆ ಬೆಳೆಗಾರನಿಗೆ ಈಗ ಮತ್ತೊಂದು ಆತಂಕ ಎದುರುರಾಗಿದೆ. ಇಲ್ಲಿ  ಅಡಿಕೆ ಮರಗಳು ಇದ್ದಕ್ಕಿದ್ದಂತೆ ಸಾಯುವುದು  ಈ ಹೊಸ ರೋಗ.

ಪುತ್ತೂರು ತಾಲೂಕಿನ ಸವಣೂರು ಬಳಿಯ ಸೋಂಪಾಡಿಯ ಅಡಿಕೆ ಬೆಳೆಗಾರ ಸಂಪತ್ ಕುಮಾರ್ ತೋಟದಲ್ಲಿ  ಈ ಹೊಸ ರೋಗ ಪತ್ತೆಯಾಗಿದೆ. ಇಲ್ಲಿ  ತೋಟದಲ್ಲಿ  ಅಡಿಕೆ ಮರವೊಂದು ಒಣಗಿದ ರೀತಿಯಲ್ಲಿ ಕಂಡುಬಂದಿತ್ತು. ಅದಾದ ಬಳಿಕ ಎರಡು ದಿನಗಳ ನಂತರ ಆಸುಪಾಸಿನ ಕೆಲವು ಮರಗಳು ಅದೇ ರೀತಿ ಒಣಗಿದೆ. ಅದರಲ್ಲಿ  ಗಿಡ ಹಾಗೂ ದೊಡ್ಡ ಅಡಿಕೆ ಮರ ಕೂಡಾ ಸೇರಿರುವುದು ಆತಂಕದ ವಿಚಾರವಾಗಿದೆ ಎನ್ನುತ್ತಾರೆ ಸಂಪತ್. ಈಗ ಸುಮಾರು ೨೫ ಅಡಿಕೆ ಮರಗಳಲ್ಲಿ  ಈ ಲಕ್ಷಣ ಕಂಡುಬಂದಿದೆ.  ಈ ಒಣಗಿದ ಅಡಿಕೆ ಮರವನ್ನು ಉರುಳಿಸಿ ನೋಡಿದಾಗ ಮರದ ತುದಿ ಅಂದರೆ ಮರದಲ್ಲಿ ಸೋಗೆ ಆರಂಭವಾಗುವ ಭಾಗದಲ್ಲಿ  ತುಂಡಾಗಿದೆ. ಆ ಭಾಗದಲ್ಲಿ  ಒಣಗಿನವರೆಗೆ ಕೊಳೆತು ಹೋಗಿರುವುದು ಕಂಡುಬಂದಿದೆ ಎಂದು ಸಂಪತ್ ವಿವರಿಸುತ್ತಾರೆ.ಆರಂಭದಲ್ಲಿ  ಸಿಡಿಲು ಬಡಿದು ಅಡಿಕೆ ಮರಕ್ಕೆ ಹಾನಿಯಾಗಿರಬಹುದು  ಎಂದು  ಅಂದಾಜಿಸಲಾಗಿತ್ತು , ಆದರೆ ಇದೀಗ ನಿಧಾನವಾಗಿ ಆಸುಪಾಸಿನ ಮರಳಿಗೂ ಹರಡುತ್ತಿರುವುದರಿಂದ ಸ್ವಲ್ಪ ಗಮನಿಸುವಂತೆ ಮಾಡಿದೆ.ಆದರೆ ಆಸುಪಾಸಿನ ಯಾವುದೇ ತೋಟಗಳಲ್ಲಿ  ಈಗ ಇಂತಹ ರೋಗ ಕಂಡುಬಂದಿಲ್ಲ.

ಕಳೆದ ವರ್ಷವೂ ಇತ್ತು :

ಸಂಪತ್ ಕುಮಾರ್ ಅವರಿಗೆ ಒಟ್ಟು  ಸುಮಾರು 1.5 ಎಕ್ರೆ ಅಡಿಕೆ ತೋಟ ಇದೆ. ಇದರಲ್ಲಿ  ಸುಮಾರು 600 ರಿಂದ 700 ಅಡಿಕೆ ಮರ ಇದೆ. ಸುಮಾರು 14 ವರ್ಷಗಳಿಂದ ಸಾವಯವ ಕೃಷಿಯನ್ನೇ ಮಾಡುತ್ತಿರುವ ಸೋಂಪಾಡಿಯಲ್ಲಿ ಈಗ ಕಾಡುತ್ತಿರುವ ರೋಗ ಅಚ್ಚರಿ ಮೂಡಿಸಿದೆ.ಕಳೆದ ವರ್ಷವೂ ಇದೇ ರೀತಿ ಅಡಿಕೆ ಮರ ಸಾಯುವುದು ಕಂಡಿತ್ತು. ಆಗಲೂ ಸಿಡಿಲು ಬಡಿದು ಹಾನಿಯಾಗಿರಬಹುದು ಎಂದು ಭಾವಿಸಿದ್ದರು. ಆಗ ಸುಮಾರು 25 ರಿಂದ 30 ಅಡಿಕೆ ಮರ ಸತ್ತಿತ್ತು. ಅದಾದ ಬಳಿಕ ಅಲ್ಲಿಗೇ ಮರ ಸಾಯುವುದು ನಿಂತಿತ್ತು. ಆದರೆ ಇದುವರೆಗೆ ಯಾವುದೇ ಇಲಾಖೆಗಳಿಗೆ ಈ ಬಗ್ಗೆ ಮನವಿ  ನೀಡಿಲ್ಲ.

ಕೊಳೆರೋಗ ಕಾರಣವೇ ?:

ಇಂತಹ ಹೊಸ ರೋಗಕ್ಕೆ ಅಡಿಕೆ ಕೊಳೆರೋಗ ಕಾರಣ ಇರಬಹುದೇ ಎಂಬ ಸಂದೇಹದ ಬಗ್ಗೆ ಪ್ರಶ್ನಿಸಿದಾಗ , ಕಳೆದ ವರ್ಷ ಈ ಪ್ರದೇಶದಲ್ಲಿ ಅಷ್ಟೊಂದು ಕೊಳೆರೋಗ ಇದ್ದಿರಲಿಲ್ಲ. ಅದರಲ್ಲೂ ದೊಡ್ಡ ಅಡಿಕೆ ಮರಕ್ಕಾದರೆ ಸರಿ ಕೊಳೆರೋಗ ಬಾಧಿಸಿತ್ತು ಎಂದು ಹೇಳಬಹುದು ಆದರೆ , ಸಣ್ಣ ಅಡಿಕೆ ಮರಗಳಿಗೂ ಕೊಳೆರೋಗ ಬಾಧಿಸಿರಲೇ ಇಲ್ಲ ಎನ್ನುತ್ತಾರೆ ಸಂಪತ್. ಅದರ ಜೊತೆಗೆ ಒಂದು ಪ್ರದೇಶದಲ್ಲೇ ಈರೀತಿ ಸಾಯುವುದಕ್ಕೆ ಕಾರಣವೇ ಗೊತ್ತಾಗುತ್ತಿಲ್ಲ ಅಂತಾರೆ ಅವರು.ಇನ್ನು  ಸುಳಿಕೊಳೆ ರೋಗವಾದರೆ ಅಡಿಕೆ ಮರದ ಸುಳಿಯೇ ಕೊಳೆಯಬೇಕಾಗಿತ್ತು , ಆದರೆ ಇಲ್ಲಿ  ಅಡಿಕೆ ಮರದ ಸುಳಿ ಕೊಳೆಯುವುದು ಗೊತ್ತಾಗುತ್ತಿಲ್ಲ , ಹಿಂಗಾರ ಬಿಡುವ ಪ್ರದೇಶ ಅಂದರೆ ಸೋಗೆ ಇರುವ ಕಡೆಯಲ್ಲೇ ಒಣಗುತ್ತದೆ ಎನ್ನುತ್ತಾರೆ ಸಂಪತ್ ಕುಮಾರ್ ತಾಯಿ  ಕಾಂಚನ.

ಒಟ್ಟಿನಲ್ಲಿ ಸವಣೂರಿನಲ್ಲಿ  ಅಡಿಕೆ ಮರಕ್ಕೆ ಕಂಡುಬಂದಿರುವ ಈ ರೋಗದ ಬಗ್ಗೆ ವಿಶೇಷವಾದ ಅಧ್ಯಯನ ಆಗಬೇಕಾಗಿದೆ.ಇದು ಹರಡುವ ರೋಗವೇ ಅಥವಾ ಮಣ್ಣಿನಿಂದ ಬರುವುದೇ ಎಂಬುದರ ಬಗ್ಗೆಯೂ ಅಧ್ಯಯನ ನಡೆಯಬೇಕಾಗಿದೆ.





08 ಜೂನ್ 2012

ಬೆಟ್ಟದ ಮೇಲಿನ ಭಟ್ಟರ ಮನೆಗೆ 38 ವರ್ಷದ ಬಳಿಕ ಪ್ಲಾಸ್ಟಿಕ್ ಚಯರ್. . . !





ಅವರದು ಬೆಟ್ಟದ ಮೇಲಿನ ಬದುಕು. ಸರಿಸುಮಾರು 38  ವರ್ಷಗಳಿಂದ ಗಿರಿಗದ್ದೆಯಲ್ಲಿ ಅವರ ವಾಸ. ಈಗ ಅವರ ಮನೆಯೊಳಗೆ ಹೊಕ್ಕಿದೆ ಪ್ಲಾಸ್ಟಿಕ್ ಚಯರ್.ಹಾಂಗಂತ ಅವರು ಪ್ಲಾಸ್ಟಿಕ್ ಚಯರ್ ಕಂಡೇ ಇಲ್ಲ ಅಂತಲ್ಲ. ನಾಡಿನ ಸ್ಪರ್ಶವಿಲ್ಲದ ಪರಿಸರದ ಪ್ರೇಮಿ ಗಿರಿಗದ್ದೆ ಮನೆಗೆ ಈ ಚಯರ್    ತಲುಪಿದ್ದೇ ಒಂದು ವಿಶೇಷ ಸುದ್ದಿ.






ಇವರು ಗಿರಿಗದ್ದೆ ಮಹಾಲಿಂಗೇಶ್ವರ ಭಟ್. ಚಾರಣಪ್ರಿಯರಿಗೆ ಇವರನ್ನು ಪರಿಚಯಿಸಬೇಕಾದ್ದಿಲ್ಲ.ಕುಕ್ಕೆ ಸುಬ್ರಹ್ಮಣ್ಯದಿಂದ 4 ಕಿಲೋ ಮೀಟರ್ ದೂರದಲ್ಲಿ  ಕುಮಾರಪರ್ವತದ ಹಾದಿಯ ಗಿರಿಗದ್ದೆಯಲ್ಲಿ ಇವರ ಮನೆ. ಗಿರಿಗದ್ದೆ ಭಟ್ಟರು ಅಂತಲೇ ಫೇಮಸ್ಸು.ಇಂದು ಫೇಸ್‌ಬುಕ್ ಮೂಲಕವೂ ಜಗತ್ತಿನ ಸಂಪರ್ಕ ಹೊಂದಿರುವ ಬೆಟ್ಟದ ಮನುಷ್ಯ. ಈ ಕುಟುಂಬ ಗಿರಿಗದ್ದೆಗೆ ಬಂದದ್ದು 1974  ರಲ್ಲಿ. ಆರಂಭದಲ್ಲಿ ಇಲ್ಲಿಗೆ ಬಂದವರು ಪರಮೇಶ್ವರ ಭಟ್ಟರು. ಆ ಬಳಿಕ ಅಂದರೆ ೩೮ ವರ್ಷಗಳಿಂದ ಇಲ್ಲೇ ವಾಸ.ಮಣ್ಣಿನ ಗೋಡೆಯಿಂದ ನಿರ್ಮಿಸಿಕೊಂಡ ಈ ಮನೆಯಲ್ಲಿ  ಪ್ಲಾಸ್ಟಿಕ್ , ಸಿಮೆಂಟ್ ಬಳಕೆ ಇತ್ತೀಚೆಗಿನವರೆಗೆ ಇರಲಿಲ್ಲ. ಆದರೆ ಚಾರಣಿಗರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಚಾರಣಿಗರು ಇಲ್ಲಿ ತಂದು ಪ್ಲಾಸ್ಟಿಕ್ ಹಾಕುವುದು ಬಿಟ್ಟರೆ ಈ ಕುಟುಂಬ ಪ್ಲಾಸ್ಟಿಕ್ ಬಳಸುವುವುದು ತೀರಾ ಅಪರೂಪವಾಗಿತ್ತು.ಆ ಬಳಿಕ ನಾಲ್ಕೈದು ವರ್ಷದ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ  ಕಾಂಕ್ರೀಟ್ ಶೌಚಾಲಯ ನಿರ್ಮಾಣವಾಗಿದೆ. ಅದರ ಜೊತೆ ಜೊತೆಗೆ ಮನೆಯ ಹೊರ ಆವರಣದಲ್ಲಿ  ಒಂದಿಷ್ಟು ಸಿಮೆಂಟ್ ಬಳಿಯಲಾಗಿತ್ತು. ಮನೆಗೆ ಸೋಲಾರ್ ಲೈಟ್‌ಗಳು , ಜಲವಿದ್ಯುತ್ ವ್ಯವಸ್ಥೆ , ಮೊಬೈಲ್ ಹೀಗೆ ಎಲ್ಲವೂ ಬಂದಿತ್ತು.ಅದಾದ ನಂತರ ಈ ಬಾರಿ ಅಂದರೆ 38 ವರ್ಷದ ಬಳಿಕ ಈ ಪರಿಸರ ಸ್ನೇಹಿ ಮನೆಯೊಳಗೆ ಪ್ಲಾಸ್ಟಿಕ್ ಚಯರ್‌ಗಳು ಹೊಕ್ಕಿವೆ. ನಾಲ್ಕು ಚಯರ್ , ಟೀಪಾಯಿ ಎಲ್ಲವೂ ಪ್ಲಾಸ್ಟಿಕ್‌ನದ್ದೇ.ಇದನ್ನು ಮಂಗಳೂರಿನ A1ಎಂಬ ಕಂಪನಿಯೊಂದು ಗಿರಿಗದ್ದೆ ಮನೆಗೆ ಕೊಡುಗೆಯಾಗಿ ನೀಡಿದೆ. ಭಟ್ಟರು ಪ್ಲಾಸ್ಟಿಕ್ ಬಳಕೆಗೆ ಆಸಕ್ತಿ ಕಡಿಮೆ.ಹಾಗಿದ್ದರೂ ಪ್ಲಾಸ್ಟಿಕ್ ಚಯರ್ ಬೇಕು ಎನ್ನುವ ಆಕಾಂಕ್ಷೆ ಅವರಿಗಿತ್ತು. ಇದನ್ನು ಕುಕ್ಕೆ ಸುಬ್ರಹ್ಮಣ್ಯದಿಂದ 4 ಕಿಮೀ ಹೊತ್ತುಕೊಂಡು ಗಿರಿಗದ್ದೆಗೆ ತರಲಾಗಿದೆ.ಇದುವರೆಗೆ ಇಲ್ಲಿ  ಮರದ ಬೆಂಚು ಇತ್ತು.ಈಗ ಇದೆಲ್ಲಾ ಹೊಸ ಸೇರ್ಪಡೆ.

ಭಟ್ಟರ ಬದುಕು ಹೇಗೆ ?

ಇದೊಂದು ಅತ್ಯಂತ ಸ್ವಾರಸ್ಯಕರ ಹಾಗೂ ಅಚ್ಚರಿಯ ಸಂಗತಿಗಳು.ಭಟ್ಟರು ಈ ಬಗ್ಗೆ ತಾನಾಗಿಯೇ ಮಾತನಾಡಲಾರರು. ಕೆದಕುತ್ತಾ ಹೋದರೆ ಸಂಗತಿಗಳ ಅನಾವರಣವಾಗುತ್ತದೆ.1974 ರ ಸುಮಾರಿಗೆ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿದ್ದ ಪರಮೇಶ್ವರರ ಭಟ್ಟರು ಕುಮಾರ ಪರ್ವತ ಏರಿದರು. ಹಾಗೇ ಇಳಿದು ಬರುವಾಗ ಕೊಂಚ ಆಯಾಸವಾಗಿ ಗಿರಿಗದ್ದೆಯಲ್ಲಿ ಕುಳಿತುಕೊಂಡರು. ಆಗ ಅಲ್ಲಿ ಮನೆಯ ಕುರುಹುಗಳು ಇರುವುದು ಅವರಿಗೆ ಕಂಡಿತು.ತಾನು ಇಲ್ಲಿ ವಾಸ್ತವ್ಯ ಹೂಡಿದರೆ ಹೇಗೆ ಎಂಬ ಪ್ರಶ್ನೆಯೊಂದಿಗೆ ಸುಬ್ರಹ್ಮಣ್ಯಕ್ಕೆ ತೆರಳಿದ ಭಟ್ಟರು ಕೆಲವೇ ಸಮಯದಲ್ಲಿ  ಗಿರಿಗದ್ದೆ ಕಡೆಗೆ ಕುಟುಂಬ ಸಹಿತರಾಗಿ ಹೆಜ್ಜೆ ಹಾಕಿದರು. ಗಿರಿಗದ್ದೆಯಲ್ಲಿ  ಮಣ್ಣಿನ ಮನೆ , ಕೊಟ್ಟಿಗೆ , ಹಟ್ಟಿ ನಿರ್ಮಿಸಿಕೊಂಡು ಏಕಾಂತ ಬದುಕು ಸಾಗಿಸಿದರು. ಅಡಿಕೆ ತೋಟ, ತರಕಾರಿ ಕೃಷಿ ಎಲ್ಲವೂ ಅವರ ಏಕಾಂತ ಬದುಕಿಗೆ ಸ್ಫೂರ್ತಿ ನೀಡಿದವು.ಆಗ ಅವರಿಗೆ ಸಾತ್ ನೀಡಿದವರು ಚಾರಣಿಗರು , ಚಾರಣಿಗರಿಗೆ ಆಶ್ರಯದಾತರಾಗಿಯೂ ಗಿರಿಗದ್ದೆ ಪರಮೇಶ್ವರ ಭಟ್ಟರು ಹೆಚ್ಚು ಆತ್ಮೀಯರಾದರು.

ಪರಮೇಶ್ವರ ಭಟ್ಟರೊಂದಿಗೆ ಅವರ ಮಕ್ಕಳೂ ಗಿರಿಗದ್ದೆ ವಾಸ ಇಷ್ಟ ಪಟ್ಟರು.ಕಾಲಾನಂತರ ಅಂದರೆ ಪರಮೇಶ್ವರ ಭಟ್ಟರಿಗೆ ವೃದ್ಧಾಪ್ಯ ಬಂದಾಗ, ಗಿರಿಗದ್ದೆ ಮನೆಯಲ್ಲಿ  ಮಹಾಲಿಂಗೇಶ್ವರ ಭಟ್ಟರು ಹಾಗೂ ನಾರಾಯಣ ಭಟ್ಟರು ಚಾರಣಿಗರ ಅನ್ನದಾತರಾದರು.ಮಹಾಲಿಂಗೇಶ್ವರ ಭಟ್ಟರೊಂದಿಗೆ ಅವರ ಅತ್ತೆ ಪರಮೇಶ್ವರಿ ಅಮ್ಮನೂ ಗಿರಿಗದ್ದೆ ಆಗಮಿಸಿದರು. ಈಗ ಈ ಅಜ್ಜಿಗೆ 76 ವರ್ಷ.ಅವರು ಕುಕ್ಕೆ ಸುಬ್ರಹ್ಮಣ್ಯದ ಕಡೆಗೆ ಹೋಗದೆ 7 ವರ್ಷಗಳಾಗಿದೆ.ಉಳಿದವರೆಲ್ಲಾ ತಿಂಗಳಿಗೆ ಒಂದೆರಡು ಬಾರಿ ಸುಬ್ರಹ್ಮಣ್ಯಕ್ಕೆ ಹೋಗಿಬರುತ್ತಾರೆ. ದಿನವೂ ಹೋಗಿ ಬರಲು ಕೆಲಸದವರು ಇದ್ದಾರೆ.ಅಂದರೆ ದಿನಕ್ಕೆ ಬೆಟ್ಟದ ಕಡೆಗೆ ೮ ಕಿಲೋ ಮೀಟರ್ ನಡಿಗೆ. .!.

ಗಿರಿಗದ್ದೆಗೆ ಸುಬ್ರಹ್ಮಣ್ಯದಿಂದ ಕೆಲಸಕ್ಕೆ ಪ್ರತೀದಿನ ಈಗ ಬರುತ್ತಾರೆ. ಸುಬ್ರಹ್ಮಣ್ಯದಿಂದ ಹೊರಡುವಾಗ 25 ಕೆಜಿ ಅಕ್ಕಿ , ಬೇಳೆ ಇತ್ಯಾದಿಗಳನ್ನು ಹೊತ್ತುಕೊಂಡು 4 ಕಿಮೀ ಬೆಟ್ಟ ಏರುತ್ತಾ ಕಾಲ್ನಡಿಗೆ ಪಯಣ. ಅಲ್ಲಿ ಕೆಲಸ ಮುಗಿಸಿ ಸಂಜೆ ಮತ್ತೆ ಸುಬ್ರಹ್ಮಣ್ಯಕ್ಕೆ ಕಾಲ್ನಡಿಗೆ. ಇದರ ಜೊತೆಗೆ ಇನೊಬ್ಬರು ಸುಮಾರು 10 ಗಂಟೆ ವೇಳೆಗೆ ದನದ ಹಾಲನ್ನು ಕ್ಯಾನಲ್ಲಿ ತುಂಬಿಕೊಂಡು ಸುಬ್ರಹ್ಮಣ್ಯಕ್ಕೆ ಬರುತ್ತಾರೆ.ಈ ಹಾಲಿಗೂ ಹಾಗೇ ಒಳ್ಳೆ ಬೇಡಿಕೆ ಇದೆ.ಕೆಲವು ಆಯುರ್ವೇದ ಔಷಧಿಗಳಿಗೆ ಇಲ್ಲಿನ ಹಾಲು , ಬೆಣ್ಣೆ, ತುಪ್ಪಗಳೇ ಬೇಕು.ಏಕೆಂದರೆ ಇಲ್ಲಿರುವ ಮಲೆನಾಡು ಗಿಡ್ಡಜಾತಿಯ ಗೋವುಗಳು ಹಸಿರು ಹುಲ್ಲು ಸೇವಿಸಿ ಬಿಸಿಲಿಗೆ ಮೈಯೊಡ್ಡುವುದರಿಂದ ವಿಶೇಷ ಔಷಧಿಯುಕ್ತ ಹಾಲಿದು. ಹಾಗಾಗಿ ಈ ಹಾಲಿಗೆ ಬೇಡಿಕೆ ಇದೆ. ಇದೆಲ್ಲಾ ಇಲ್ಲಿ ನಿತ್ಯದ ಕಾಯಕ. ಇವರಿಗೆ ಹೀಗೆ ಬೆಟ್ಟ ಹತ್ತಲು ಇಳಿಯಲು ಸುಮಾರು 45 ನಿಮಿಷ ಸಾಕಾಗುತ್ತಂತೆ. . .!. ಉಳಿದವರಿಗೆ ಸುಮಾರು 1.30 ಗಂಟೆ. . !.

ಪ್ರತೀ ವರ್ಷ ಇಲ್ಲಿಗೆ ಸುಮಾರು 5 ರಿಂದ 10 ಸಾವಿರ ಚಾರಣಿಗರು ಬರುತ್ತಾರೆ ಎನ್ನುವ ಮಹಾಲಿಂಗೇಶ್ವರ ಭಟ್ಟರು , ಅತ್ಯಂತ ವಿ‌ಐಪಿಗಳು ಎನಿಸಿಕೊಂಡವರೂ ಬರುತ್ತಾರೆ. ಒಂದೊಳ್ಳೆ ಅನುಭವವಾಗುತ್ತದೆ, ಇಲ್ಲಿನ ಬದುಕು ಖುಷಿ ಕೊಡುತ್ತದೆ , ಒಂದು ರೀತಿಯ ಏಕಾಂತ ಬದುಕು , ಯಾವುದೇ ರಗಳೆ ಇಲ್ಲ ಎನ್ನುತ್ತಾರೆ.

ಕುಮಾರಪರ್ವತಕ್ಕೆ ಹೋಗುವ ಚಾರಣಿಗರು , ಹೋಗುವ ವೇಳೆ ಅಥವಾ ಬರುವ ವೇಳೆ ಭಟ್ಟರ ಮನೆಯಲ್ಲಿ ಊಟ ಮಾಡಿಯೇ ಮುಂದೆ ಹೋಗುತ್ತಾರೆ. ದಿನಮುಂದಾಗಿ ಭಟ್ಟರಿಗೆ ಮಾಹಿತಿ ನೀಡಿದರೆ ಬೆಳಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ಅಡುಗೆ ಸಿದ್ದ.ಅಲ್ಲೇ ಮನೆಯ ಹೊರಗಿನ ವಠಾರದಲ್ಲಿ ಅಡುಗೆ ಇರುತ್ತದೆ , ಸ್ವಸಹಾಯ ಪದ್ಧತಿ ಮೂಲಕ ಊಟ ಮಾಡಿದರೆ ಮುಗಿಯಿತು.ಒಂದು ದಿನದ ಊಟಕ್ಕೆ 250 ರೂಪಾಯಿ ಚಾರ್ಜ್ ಮಾಡುತ್ತಾರಂತೆ ಭಟ್ಟರು. ಕೆಲವು ಚಾರಣಿಗರು ಗಿರಿಗದ್ದೆ ಮನೆಯಲ್ಲೇ ವಾಸ್ತವ್ಯ ಹೂಡಿ ಮರುದಿನ ಬೆಳಗ್ಗೆ ಕುಮಾರಪರ್ವತ ಏರುವವರೂ ಇದ್ದಾರೆ.

ಒಟ್ಟಿನಲ್ಲಿ ಬೆಟ್ಟದ ಮೇಲಿನ ಈ ಭಟ್ಟರ ಬದುಕು ನಿಜಕ್ಕೂ ಸಾಹಸದ ಕೆಲಸ. ನಗರದ ಸಂಪರ್ಕವಿಲ್ಲದೆ ನಗರವಾಸಿಗಳ ಸಂಪರ್ಕದೊಂದಿಗೆ ಬದುಕುವ ಇವರದು ತಪಸ್ಸಿನ ಜೀವನ.ಈಗ ಈ ಬೆಟ್ಟದ ಮನೆಯೊಳಗೆ ಸೇರಿಕೊಂಡಿರುವ ಪ್ಲಾಸ್ಟಿಕ್ ಚಯರ್‌ಗಳು ಇಲ್ಲಿ ಸಾಂಕೇತಿಕ ಉಲ್ಲೇಖವಾದರೂ , ಇಂದು ಪ್ಲಾಸ್ಟಿಕ್ ಎಲ್ಲೆಲ್ಲಾ ಬಳಕೆಯಾಗುತ್ತದೆ ಮತ್ತು ಅದು ಎಲ್ಲಿಗೆಲ್ಲಾ  ತಪಲುತ್ತೆ ಎನ್ನುವುದೇ ನಿಗೂಢ.


-

01 ಜನವರಿ 2012

ಭ್ರಷ್ಟಾಚಾರದ ವಿರುದ್ದ ಧ್ವನಿ ಎತ್ತಿದ ವರ್ಷ 2011



ಭೂತಕಾಲದ ಅನುಭವಗಳು, ವರ್ತಮಾನದ ಕ್ರಿಯೆಗಳು ಜೊತೆ ಸೇರಿ ಭವಿಷ್ಯವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆಯಂತೆ. ಈ ನಂಬಿಕೆಯನ್ನು ಇಟ್ಟುಕೊಂಡು ಬದುಕುವ ನಾವು ಈಗ 2011 ನೇ ವರ್ಷವನ್ನು ದಾಟಿ ಮುಂದೆ ಬಂದಿದ್ದೇವೆ.2012 ನೇ ಇಸವಿಗೆ ಕಾಲಿಡುವ ಈ ವೇಳೆ ಹಿಂದೆ ತಿರುಗಿ ಸಾಗಿ ಬಂದ ದಾರಿಯನೊಮ್ಮೆ ಅವಲೋಕಿಸಬೇಡವೇ ?. 2011 ರಲ್ಲಿ ಏನೇನಾಗಿದೆ ಅಂತ ಕುಂತು ಯೋಚಿಸುವ, ಎಲ್ಲವೂ ನೆನೆಪಾಗುತ್ತದೆ ಎಂದಲ್ಲ , ನೆನಪು ಮಾಡುವ ಪ್ರಯತ್ನ ಮಾಡೋಣ. .

 ಇಂದು ಇಡೀ ದೇಶದಲ್ಲಿ ಚರ್ಚೆಯಾಗುತ್ತಿರುವ ಮತ್ತು ಎಲ್ಲಾ ಜನ ಕೂಡಾ ಒಕ್ಕೊರಲಿನಿಂದ ಧ್ವನಿಗೂಡಿಸುವುದು ಭ್ರಷ್ಟಾಚಾರ ತೊಲಗಲಿ ಅಂತಲೇ. ಅಂತಹ ಭ್ರಷ್ಟಾಚಾರದ ವಿರುದ್ದ ಮೊದಲ ಕಹಳೆ ಮೊಳಗಿದ್ದು ಪುತ್ತೂರಿನಿಂದ. ಮಾರ್ಚ್ ವೇಳೆಗೆ ಪುತ್ತೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಪ್ರತಿನಿಧಿ ಸಭಾವು ನಡೆಯಿತು. ಸಂಘಪರಿವಾರದ ಎಲ್ಲಾ ಅಂಗಸಂಸ್ಥೆಗಳು ಈ ಸಭಾದಲ್ಲಿ ಭಾಗವಹಿಸಿ ದೇಶದ ಆಗುಹೋಗುಗಳ ಬಗ್ಗೆ ಚಿಂತಿಸುತ್ತಾ ಭವಿಷ್ಯದ ಭಾರತಕ್ಕಾಗಿ ದಿಟ್ಟ ಹೆಜ್ಜೆ ಇಡುವ ಪ್ರಯತ್ನ ನಡೆಯಿತು. ಅದರ ಒಂದು ಭಾಗವಾದ ಭ್ರಷ್ಟಾಚಾರ ವಿರುದ್ದದ ಆಂದೋಲನ ಇಂದಿಗೂ ನಡೆಯುತ್ತಿದೆ. ಇದರ ಜೊತೆ ಜೊತೆಗೇ ಯೋಗಗುರು ಬಾಬಾ ರಾಂದೇವ್ ಅವರು ಕೂಡಾ ಭ್ರಷ್ಟಾಚಾರ ವಿರೋಧಿ ಆಂದೋಲನ ಮಾಡುತ್ತಾ ಮಂಗಳೂರಿನಲ್ಲಿ ಸಭೆಯನ್ನು ನಡೆಸಿದರು.ಈ ಮೂಲಕವೂ ಭ್ರಷ್ಟಾಚಾರ ವಿರೋಧಿ ಅಲೆಯನ್ನು ಎಬ್ಬಿಸಿದರು. ಅದಾದ ನಂತರ ದೇಶದಲ್ಲಿ ಅಣ್ಣಾ ಹಜಾರೆಯವರು ಭ್ರಷ್ಟಾಚಾರದ ವಿರುದ್ದ ಸಮರ ಸಾರಿ ಉಪವಾಸ ಕುಳಿತಾಗ ಮಂಗಳೂರು ಸೇರಿದಂತೆ ಇಡೀ ಜಿಲ್ಲೆಯ ಜನತೆ ಕೂಡಾ ಉಪವಾಸಕ್ಕೆ ಬೆಂಬಲವಾಗಿ ನಿಂತರು.ಪುತ್ತೂರಿನಲ್ಲಿ ಕೂಡಾ ಈ ಉಪವಾಸಕ್ಕೆ ಬೆಂಬಲಲವಾಗಿ ಗಾಂಧಿ ಪ್ರತಿಮೆ ಬಳಿ ಕುಳಿತು ಅಣ್ಣಾಗೆ ಬೆಂಬಲ ವ್ಯಕ್ತವಾಯಿತು.ಲೋಕಪಾಲ ಜಾರಿಗೆ ಒತ್ತಾಯ ಕೇಳಿಬಂತು. ಯುವಕರಲ್ಲೂ ಈ ಜಾಗೃತಿ ಮೂಡಿತು.ಹೀಗೆಯೇ ಇದುವರೆಗಿನ ಇತಿಹಾಸದಲ್ಲಿ 2011 ಭ್ರಷ್ಟಾಚಾರದ ವಿರುದ್ದ ಸಮರ ಸಾರಿದ ವರ್ಷ ಅಂತ ಹೇಳಿಬಿಡಬಹುದು. ಈ ನಿಟ್ಟಿನಲ್ಲಿ ಇದು ಅತ್ಯಂತ ಪ್ರಮುಖ ವರ್ಷ.

 ಧರ್ಮ ಕ್ಷೇತ್ರ :

 ಇದೆಲ್ಲಾ ನಡೆಯುತ್ತಿರುವಂತೆಯೇ ಧಾರ್ಮಿಕವಾಗಿಯೂ ಜಿಲ್ಲೆಯಲ್ಲಿ ಸಾಕಷ್ಟು ಪ್ರಗತಿ , ಟೀಕೆಗಳು ಬಂತು. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ , ಇದಕ್ಕಾಗಿ ಸಾಕಷ್ಟು ತಯಾರಿ ನಡದರೆ ಇತ್ತ ಕಡೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಕೆಲಸ ಕಾರ್ಯಗಳು ಕೂಡಾ ವೇಗ ಪಡೆದುಕೊಂಡಿತು.ಈಶ್ವರಮಂಗಲದಲ್ಲಿ ಏಕಶಿಲಾ ಆಂಜನೇಯನ ವಿಗ್ರಹ ಸ್ಥಾಪನೆ , ರಾಮಾಯಣ ಹಾಗೂ ಹನುಮಾನ್ ಮಾನಸೋದ್ಯಾನ ಇನ್ನೊಂದು ಪ್ರಮುಖ ಅಂಶವಾಗಿದೆ.ಕಲ್ಲಡ್ಕದಲ್ಲಿ ನಡೆದ ವಾಜಪೇಯ ಯಾಗವು ಇಡೀ ನಾಡಿನ ಜನರ ಗಮನ ಸೆಳೆಯಿತು , ನಾಡಿನ ಹಿತ ದೃಷ್ಠಿಯಿಂದ ಆಯೋಜಿಸಿದ್ದ ಈ ಯಾಗವು ಅತ್ಯಂತ ಮಹತ್ವಪೂರ್ಣ ಕಾರ್ಯಕ್ರಮವಾಗಿ ದಾಖಲಾಯಿತು. ಇನ್ನೊಂದು ಕಡೆ ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ವಿಧವೆಯರಿಂದ ರಥೋತ್ಸವ ಕೂಡಾ ನಡೆಯುವ ಮೂಲಕ ವಿಶೇಷ ಗಮನ ಸೆಳೆದರೆ , ರಾಜ್ಯದ ಪ್ರಮುಖ ದೇವಸ್ಥಾನವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಡೆಮಡೆಸ್ನಾನವು ವ್ಯಾಪಕ ಚರ್ಚೆಗೆ ಕಾರಣವಾಯಿತು. ಅಂತಿಮವಾಗಿ ಸರಕಾರಕ್ಕೆ ಕೂಡಾ ಈ ಬಗ್ಗೆ ಸ್ಫಷ್ಟವಾದ ನಿಲುವು ಪಡೆಯಲು ಸಾಧ್ಯವಾಗಲಿಲ್ಲ. ಉಳಿದಂತೆ ಪ್ರತೀ ವರ್ಷದಂತೆ ಧರ್ಮಸ್ಥಳದ ಲಕ್ಷದೀಪೋತ್ಸವ, ಸುಬ್ರಹ್ಮಣ್ಯದ ಚಂಪಾಷಷ್ಟಿ ಸೇರಿದಂತೆ ದೇವಾಲಯಗಳ ಉತ್ಸವಗಳು ನೆನಪಾದವು. ಒಂದು ಹಂತದಲ್ಲಿ ರಾಜ್ಯದ ಆಡಳಿತ ನಡೆಸುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ತಿಕ್ಕಾಟವು ಆಣೆ ಭಾಷೆಗೆ ತಲುಪಿ ಧರ್ಮಸ್ಥಳಕ್ಕೆ ಆಗಮಿಸಿದ್ದು ರಾಜ್ಯದಾದ್ಯಂತ ಅತ್ಯಂತ ಕುತೂಹಲಕ್ಕೆ ಕಾರಣವಾದ ವಿದ್ಯಮಾನವಾಗಿತ್ತು.ಆ ಬಳಿಕದ ವಿದ್ಯಮಾನದಲ್ಲಿ ಮುಖ್ಯಮಂತ್ರಿ ಪಟ್ಟವನ್ನು ಯಡಿಯೂರಪ್ಪ ಬಿಡಬೇಕಾಯಿತು. ಜನರ ಅತೀ ಅಗತ್ಯದ ಮಾಣಿ - ಸಂಪಾಜೆ ತೀರಾಹದಗೆಟ್ಟು ಜನರಿಗೆ ಓಡಾಟಕ್ಕೆ ಕಷ್ಟವಾದ ಸನಿವೇಶ ಒಂದು ಕಡೆಯಾದರೆ ಮತ್ತೊಂದು ಕಡೆ ಅನಿರೀಕ್ಷಿತ ಬೆಳವಣಿಯೆಲ್ಲಿ ನಮ್ಮದೇ ಜಿಲ್ಲೆಯ ಡಿ.ವಿ.ಸದಾನಂದ ಗೌಡ ಮುಖ್ಯಮಂತ್ರಿಯಾದರು.

 ಶಾಂತಿ-ಅಶಾಂತಿ: 

 ಬೆಳ್ತಂಗಡಿ ತಾಲೂಕಿನಲ್ಲಿ ಗುಂಡಿನ ಧಾಳಿಗೆ ಪೊಲೀಸ್ ಕಾನ್‌ಸ್ಟೇಬಲ್ ಮಾನೆ ಮೃತರಾದರು.ಈ ಗುಂಡಿನ ಧಾಳಿ ಪೊಲೀಸರದ್ದೂ ನಕ್ಸಲರದ್ದೋ ಎಂಬುದು ಕೊನೆಯವರೆಗೂ ಸ್ಫಷ್ಟವಾಗಿಲ್ಲ.ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲೂ ಕೂಡಾ ಪೊಲೀಸ್ ಮಾಹಿತಿದಾರ ಎಂಬ ಕಾರಣಕ್ಕೆ ಕಬ್ಬಿನಾಲೆ ಸದಾಶಿವ ಗೌಡ ಮೃತನಾದ.ಇದೆಲ್ಲಾ ನಕ್ಸಲ್ ಘಟನೆಗೆ ಸಂಬಂಧಿಸಿದ್ದಾರೆ ,ಮತ್ತೊಂದು ಕಡೆ ಉಗ್ರಗಾಮಿಗಳ ನಂಟು ದಕ್ಷಿಣ ಕನ್ನಡ ಜಿಲ್ಲೆ , ಉಡುಪಿ ಜಿಲ್ಲೆಗಳ ಮೇಲೆ ಬಿದ್ದದ್ದು ಸ್ಫಷ್ಟವಾಗಿ ಕಂಡಿದೆ. ಕರಾವಳಿ ಜಿಲ್ಲೆಯಾದ್ಯಂತ ಈ ಜಾಲ ಇರುವುದು ತನಿಖೆಯ ವೇಳೆ ಗೊತ್ತಾಗಿದೆ ಅದರ ಒಂದು ಭಾಗವೇ ಭಟ್ಕಳದ ನಂಟು ಇರುವುದರ ಬಗ್ಗೆಯೂ ಪೊಲೀಸರು ಹೇಳಿದ್ದಾರೆ. ಇನ್ನು ಮತಾಂಧರ ಚಟುವಟಕೆ ಕಮ್ಮಿ ಏನೂ ಇದ್ದಿರಲಿಲ್ಲ. ಕಾಸರಗೋಡು ಸೇರಿದಂತೆ ಕರ್ನಾಟಕದ ಗಡಿಭಾಗಗಳಲ್ಲಿ ಇಂತಹ ಅನೇಕ ಚಟುವಟಿಕೆ ಕಂಡುಬಂದಿದೆ. ಇನ್ನು ಸುಳ್ಯದಲ್ಲಿ ಹಿಂದೂ ತರುಣರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಜಿಲ್ಲೆಯ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿದೆ ಉಳಿದುಕೊಂಡಿತು.

 ಕೃಷಿಕರಿಗೆ ಬೇವು-ಬೆಲ್ಲ :

 ಈ ಬಾರಿ ಅವಿಭಜಿತ ಜಿಲ್ಲೆಗೆ ಸಾಕಷ್ಟು ಮಳೆ ಸಿಕ್ಕಿದೆ.ಇದೆಲ್ಲದರ ನಡುವೆ 2011 ಕೃಷಿಕರ ಪಾಲಿಗೆ ಬೇವು-ಬೆಲ್ಲ ಮಿಶ್ರಣದ ವರ್ಷ. ಜಿಲ್ಲೆಯ ಪ್ರಮುಖ ಬೆಳೆ ಅಡಿಕೆಗೆ ಆರಂಭದಲ್ಲಿ ಬೆಲೆ ಕಡಿಮೆ ಇದ್ದರೂ ಆ ಬಳಿಕ ಏರುಹಾದಿಯಲ್ಲಿ ಕಂಡಿದೆ. ಅದರ ಜೊತೆಗೆ ರಬ್ಬರ್ , ತೆಂಗು, ಕಾಳುಮೆಣಸು ,ಕೂಡಾ ರೈತರಿಗೆ ಆಶಾದಾಯಕ ವಾತಾವರಣ ಸೃಷ್ಠಿ ಮಾಡಿತ್ತು. ಆದರೆ ಯಥಾ ಪ್ರಕಾರ ಕೃಷಿಕರು ಕೂಲಿ ಕಾರ್ಮಿಕರ ಸಮಸ್ಯೆಯಿಂದ ಮಾತ್ರಾ ಮುಕ್ತಿ ಪಡೆಯಲಿಲ್ಲ.ಅದರ ಬದಲಾಗಿ ಯಂತ್ರಗಳತ್ತ ಹೆಚ್ಚು ರೈತರು ಒಲವು ತೋರಿದರು. ಇದರ ಜೊತೆ ಜೊತೆಗೇ ಈ ಬಾರಿ ಅಡಿಕೆಗೆ ಕೊಳೆರೋಗ ವ್ಯಾಪಕವಾಗಿ ಕಾಡಿದ್ದು ರೈತರನ್ನು ಹೈರಾಣಾಗಿಸಿದೆ. ಆ ಹೊಡೆತದಿಂದ ಇನ್ನೂ ಅನೇಕ ಕೃಷಿಕರು ಚೇತರಿಸಿಕೊಂಡಿಲ್ಲ.

 ಸಾಹಿತ್ಯ-ಸಾಂಸ್ಕೃತಿಕ 

 ವಿಶ್ವ ತುಳು ಸಮ್ಮೇಳನದ ಬಳಿಕ ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಖಿಲ ಬಾರತ ತುಳು ಸಮ್ಮೇಳನವು ಯಶಸ್ವಿಯಾಗಿ ಸಂಘಟಿಸಲಾಯಿತು , ಜೊತೆ ಜೊತೆಗೇ ಅಳಿಕೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಕೂಡಾ ಯಶಸ್ವಿಯಾಯಿತು.ಇನ್ನು ಮೂಡಬಿದರೆಯಲ್ಲಿ ಆಳ್ವಾಸ್ ನುಡಿಸಿರಿ ಕೂಡಾ ಉತ್ತಮವಾಗಿ ಸಂಘಟಿಸಲಾಗಿತ್ತು.

 ------------------------------------------------------------
ಇದು ಇಂದಿನ ಹೊಸದಿಗಂತದಲ್ಲಿ ಪ್ರಕಟವಾದ ನನ್ನ ಬರಹ. ..  .
--------------------------------------------------------------

31 ಡಿಸೆಂಬರ್ 2011

ಅವಲೋಕನದ ಕಾಲ ಇದು. . .

ಒಂದಿಡೀ ವರ್ಷ ಕಳೆದುಹೋಯಿತು. ಹೆಜ್ಜೆ ಇಡುತ್ತಾ ಬಹುದೂರ ಸಾಗಿಯಾಗಿ ಈಗ ಇನ್ನೊಂದು ಕಾಲಘಟ್ಟದಲ್ಲಿದ್ದೇವೆ. ಈಗ ಕುಂತು ಹಿಂದೆ ತಿರುಗಿ ನೋಡಬೇಕು.ಅಂತ ಅನಿಸುತ್ತೆ.

 ನಮಗೆ ಪ್ರತೀ ದಿನವೂ ಕೂಡಾ ಹೊಸದೇ.ಹಾಗೆಂದು ಪ್ರತಿ ದಿನವೂ ಬದಲಾವಣೆ ಇದ್ದೇ ಇರುತ್ತೆ. ಅದು ನಮಗೆ ಮಾತ್ರವಲ್ಲ ಈ ಪ್ರಕೃತಿಗೂ ಅನ್ವಯಿಸುತ್ತೆ. ಹಾಗಾಗಿ ಹಿಂದಿನ ಅನುಭವಗಳು , ಮುಂದಿನ ದಾರಿಯನ್ನು ಸುಲಭಗೊಳಿಸಬಹುದು. ಹಾಗಾಗಿ ಅವಲೋಕನ ಬೇಕು. ಅದಕ್ಕೆಂದೇ ಒಂದು ದಿನ ಅಂತ ಬೇಡ. ಆದರೆ ಇದೊಂದು ಮುಖ್ಯ ಘಟ್ಟ. ಏಕೆಂದರೆ 11 ಕಳೆದ 12 ಬರುವ ಹೊಸಕಾಲ ಇದು. ಅದರ ಜೊತೆ ಜೊತೆಗೇ ನಮ್ಮ ಸಾಧನೆಯ ಹಿಂದೆ ಅದ್ಯಾರದ್ದೋ ಸಹಕಾರ , ಪ್ರೋತ್ಸಾಹವೂ ಇರಬಹುದು , ಅದನ್ನೆಲ್ಲಾ ಒಮ್ಮೆ ನೆನಯಲೇ ಬೇಕಲ್ಲ.

 ಹಾಗೆ ನೆನೆಯುತ್ತಾ ಹೋದಾಗ , ಕುಂತು ಯೋಚಿಸುತ್ತಾ ಕುಳಿತಾಗ ,2011 ನನಗೇನು ದೊಡ್ಡ ಸಾಧನೆಯ ವರ್ಷವಲ್ಲ. ಆದರೆ ಖುಷಿಯ ವರ್ಷ. ಏಕೆಂದರೆ ಒಬ್ಬ ಪಾಪು ನಮ್ಮ ಮನೆಗೆ ಪ್ರವೇಶಿಸಿದ್ದಾನೆ.ಇಂದಿಗೆ ಆತನಿಗೆ 9 ತಿಂಗಳು ಕಳೆದು 10 ತಿಂಗಳ ಪ್ರಾಯ. ಇನ್ನು ಸಹೋದರಿಯ ವಿವಾಹ ಇದೆಲ್ಲಾ ಪ್ರಮುಖವಾದ ಖುಷಿಯ ಸಂಗತಿಗಳು. ಆದರೆ ಅತ್ತ ಕಡೆ ನೋಡಿದರೆ , ಮಾರ್ಚ್ ನಂತರ ನಾನೀಗ ಸುದ್ದಿ ಮಾಡುತ್ತಿರುವ ಪತ್ರಿಕೆ ಹೊಸದಿಂಗಂತಕ್ಕೆ ಪುತ್ತೂರಿನಿಂದ ಅವಕಾಶ ಸಿಕ್ಕಿದ್ದು ಅನಿರೀಕ್ಷಿತ ಬೆಳವಣಿಗೆಯಲ್ಲಿ.ಒಂದು ಹಂತದಲ್ಲಿ ಮಾಧ್ಯಮ ರಂಗದಿಂದ ದೂರವಿದ್ದು ಕೃಷಿ ಕ್ಷೇತ್ರದಲ್ಲೇ ಮುಂದುವರಿಯುವ ಒಲವು ಹೊಂದಿದ್ದರೂ ಅನಿರಿಕ್ಷಿತವಾಗಿ ಮತ್ತೆ ಆ ಕಡೆ ಸೆಳೆಯಿತು.ಮತ್ತೆ ಮತ್ತೆ ಅಲ್ಲೇ ಅವಕಾಶಗಳು ಸಿಗುತ್ತಿದೆ. ಆದರೆ ಪ್ರತೀದಿನದ ಒಂದು ಸ್ವಲ್ಪ ಭಾಗ ಕೃಷಿಯ ಕಡೆಗೆ ಗಮನಹರಿಸದೇ ಇರುವುದಿಲ್ಲ. ಆದರೆ ನನ್ನ ಪ್ರತೀದಿನದ ಆಗುಹೋಗುಗಳಲ್ಲಿ ನನ್ನ ಮಿತ್ರರ ಸಹಕಾರ ಇದ್ದೇ ಇದೆ.ಏಕೆಂದರೆ ನನ್ನೊಬ್ಬನಿಂದಲೇ ಏನನ್ನೂ ಮಾಡಲು ಸಾಧ್ಯವಿಲ್ಲ. ಅಂತಹ ಅಹಂಕಾರವೂ ನನಗಿಲ್ಲ. ಆದರೆ ಆತ್ಮವಿಶ್ವಾಸ ಇದೆ , ಯಾವುದೇ ಕೆಲಸವನ್ನು ಮಾಡಬಲ್ಲೆನೆಂಬ ವಿಶ್ವಾಸ ಇದೆ ಆದರೆ ಅದಕ್ಕೆ ಮಿತ್ರರ ಸಹಕಾರ ಬೇಕೇ ಬೇಕು. ಇದೆಲ್ಲಾ ಹಿಂದಿನ ಕತೆಯಾಯಿತು. ಆದರೆ ಎಲ್ಲವನ್ನೂ ಬಹಿರಂಗವಾಗಿ ಹೇಳಿಕೊಳ್ಳಲು ಬರುವುದಿಲ್ಲ. ಕೆಲವನ್ನು ಮನದಲ್ಲೇ ನೆನೆಸಿಕೊಂಡು ಅವುಗಳಿಗೆ ಕೃತಜ್ಞತೆ , ತಪ್ಪುಗಳಾಗಿದ್ದರೆ ಮಂಥನ ನಡೆಸುತ್ತಲೇ ಇದ್ದೇನೆ.

 ಇವುಗಳನ್ನೆಲ್ಲಾ ನೆನಪಿಸಿಕೊಂಡು 2012 ಹೇಗಿರಬೇಕು ?, ಇಲ್ಲ ತುಂಬಾ ನಿರೀಕ್ಷೆಗಳಿಲ್ಲ , ಬದುಕನ್ನು ಬಂದ ಹಾಗೆ ಸ್ವೀಕರಿಸುವುದು , ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಇದೆರಡು ಪ್ರಮುಖವಾಗಿದೆ. ಕಳೆದ ಒಂದೆರಡು ವರ್ಷಗಳಲ್ಲಿ ನನ್ನದೇ ಕೆಲವು ಸಿದ್ದಾಂತಗಳಿಗೆ ಗಂಟುಬಿದ್ದು ಕೊಂಚ ಹಿನ್ನಡೆಯಾಗಿದೆ.ಏಕೆಂದರೆ ನಂಬಿದ ಸಿದ್ದಾಂತಗಳು ಕೆಲವೊಮ್ಮೆ ನಮಗೇ ರಿವರ್ಸ್ ಹೊಡೆದಿದೆ.ಅವಕಾಶಗಳು ತಪ್ಪಿ ಹೋಗಿವೆ. ಹಾಗಾಗಿ ಈ ವರ್ಷ ಸಿಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು , ಸಿದ್ದಾಂತಗಳಿಗೆ ಗಂಟುಬೀಳದೆ. ಇನ್ನೊಂದು ಬಹುಮುಖ್ಯವಾದ್ದು ಈ ಬಾರಿ ಸೋಲನ್ನು ಒಪ್ಪಿಕೊಳ್ಳಬೇಕು. ಒಂದು ವೇಳೆ ಸೋಲು ಅಂತ ಕಂಡರೆ ಅದರ ಸಮರ್ಥನೆ ಮಾಡದೆ ಆ ಸೋಲನ್ನು ಒಪ್ಪಿಕೊಂಡು ಬಿಡುವುದು. ಏಕೆಂದರೆ ಸೋಲು ಅಂದರೆ ರಾಜಿಯಾಗುವುದು ಅಷ್ಟೇ, ಇದು ಬಹುಮುಖ್ಯ ಅಂತ ಅನಿಸಿದೆ.


17 ಡಿಸೆಂಬರ್ 2011

ಕಾನನದೊಳಗಿನ ಮೌನದ ನಡುವೆ ಕಲ್ಲಿನ ಸದ್ದು. .!

ಅದು ದೊಡ್ಡ ಕಾಡು.ಸುತ್ತಲೂ ಮೌನ ಆವರಿಸಿದೆ.ಹಕ್ಕಿಗಳ ಕಲರವ, ಜೀರುಂಡೆಗಳ ಸದ್ದು ,ನೀರಿನ ಜುಳು ಜುಳು ಬಿಟ್ಟರೆ ಬೇರಾವ ಸದ್ದೂ ಅಲ್ಲಿಲ್ಲ. ಇಂತಹ ಸುಂದರ ಕಾಡಿನ ನಡುವೆ ಈಗ ಕೇಳಿರುವುದು , ಕೇಳುತ್ತಿರುವುದು ಕಲ್ಲು ಒಡೆಯುವ ಸದ್ದು!.ನಿಜ ನಂಬಲೇ ಬೇಕು.ಅದು ಹರಳು ಕಲ್ಲು ದಂಧೆ. .!.ಬಿಸಲೆ ರಕಿತಾರಣ್ಯದ ಒಳಗೆ ಈಗ ಇದು ಸಣ್ಣ ಸದ್ದು. .!. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಹಾಸನ ಗಡಿಭಾಗದ ಯಸಳೂರು ಅರಣ್ಯ ವಲಯ ವ್ಯಾಪ್ತಿಯ ಹೊಂಗಡಹಳ್ಳ ಹಾಗೂ ಜಗಟ ಸಮೀಪದ ಬಿಸಿಲೆ ರಕ್ಷಿತಾರಣ್ಯದೊಳಗಡೆ ಒಂದು ರೀತಿಯ ಹಸಿರು ಮಿಶ್ರಿತ ಕೆಂಪು ಬಣ್ಣದ ಹರಳು ಕಲ್ಲು ದಂಧೆ ನಡೆಯುತ್ತಿದೆ.ಕಳೆದ ಕೆಲವಾರು ವರ್ಷಗಳಿಂದ ಈ ಂಧೆ ನಡೆಯುತ್ತಿದೆ ಎಂಬ ಅನುಮಾನ ಈಗ ದಟ್ಟವಾಗುತ್ಗೀಗ ಸುಮಾರು 6 ರಿಂದ 8 ಎಕ್ರೆ ಪ್ರದೇಶದಲ್ಲಿ ಈ ಕಲ್ಲು ದಂಧೆ ನಡೆಯುತ್ತಿದೆ.ಹೀಗಾಗಿ ಬಿಸಲೆಯ ಈ ಪ್ರದೇಶದಲ್ಲಿ ಅರಣ್ಯ ನಾಶವಾದರೂ ಅಚ್ಚರಿ ಇಲ್ಲ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲಾ ಗಡಿ ಪ್ರದೇಶದ ಕೂಜಿಮಲೆ, ಸುಟ್ಟತ್‌ಮಲೆ , ಸೂಳೆಕೇರಿ ಪ್ರದೇಶಗಳಲ್ಲಿ ಭೂಮಿಯಡಿಯಲ್ಲಿ ದೊರಕುವ ನಸು ಕೆಂಪು ಹರಳುಕಲ್ಲುಗಳು ರಾಜ್ಯದಲ್ಲಿ ಪ್ರಸಿದ್ದಿಯಾಗಿತ್ತು.ಇತ್ತೀಚೆಗಿನವರೆಗೂ ಈ ದಂಧೆ ನಡೆಯುತ್ತಲೇ ಇತ್ತು.ಈಗ ಇದೇ ಮಾದರಿಯಲ್ಲಿ ಬಿಸಲೆಯಲ್ಲೂ ಇಂತಹದ್ದೇ ದಂಧೆ ನಡೆಯುತ್ತಿದೆ. ಇಲ್ಲಿ ಹೇಗೆ ನಡೆಯುತ್ತಿದೆ ? : ಬಿಸಿಲೆ ಪ್ರದೇಶದ ರಕ್ಷಿತಾರಣ್ಯವು ಪಶ್ಚಿಮ ಘಟ್ಟದ ಅಪರೂಪದ ಪ್ರದೇಶ.ಈ ಪ್ರದೇಶದಲ್ಲಿ ಸನೇಕ ಬಗೆಯ ಪ್ರಾಣಿಗಳು, ಪಕ್ಷಿಗಳು , ಜೀವಸಂಕುಲಗಳು, ವಿವಿಧ ಜಾತಿಯ ಗಿಡ ಮರಗಳು ಇವೆ.ಆದರೆ ಈಗ ಈ ದಂಧೆಕೋರರ ಧಾಳಿಯಿಂದಾಗಿ ಈ ಪ್ರದೇಶವು ಹಾನಿಯಾಗುತ್ತಿದೆ.ಲಭ್ಯ ಮಾಹಿತಿ ಪ್ರಕಾರ ಈ ದಂದೆಕೋರರು ಹರಳುಕಲ್ಲು ಸಿಗುವ ಜಾಗದಲ್ಲಿ ಒಂದು ವಾರಗಳ ಕಾಲ ಟೆಂಟ್ ಹಾಕುತ್ತಾರೆ.ಬೇಕಾದಷ್ಟು ಕಲ್ಲು ತೆಗೆದ ಬಳಿಕ ಅಲ್ಲೆ ಆಸುಪಾಸಿನಲ್ಲಿ ಮೊಬೈಲ್ ಸಿಗುವ ಕಾರಣ ವ್ಯಾಪಾರಿಗಳಿಗೆ ಹೇಳಿ ಬಿಸಲೆ ರಸ್ತೆ ಬಳಿಗೆ ಬಂದು ಅಲ್ಲೇ ವ್ಯಾಪಾರ ಕುದುರಿಸಿ ಹಣದೊಂದಿಗೆ ಊರಿಗೆ ಹಿಂತಿರುಗುತ್ತಾರೆ ಎಂಬ ಮಾಹಿತಿ ಇದೆ.ಈಗಾಗಲ ಇಲ್ಲಿ ಹರಳುಕಲ್ಲಿಗಾಗಿ ಅಗೆದು ಸುಮಾರು 3 ಮೀಟರ್ ಚೌಕಾಕಾರದ ಗುಂಡಿ ತೋಡಲಾಗಿದೆ.ಇದರ ಜೊತೆಗೆ ಕಾಡಿನಲ್ಲಿರುವ ಕಲ್ಲುಗಳು ಅನೇಕ ಹುಡಿಯಾಗಿದೆ.ಕೆಲವು ಕಲ್ಲುಗಳು ಭೂಮಿಯ ಮೇಲೆಯೇ ಸಿಗುವುದರಿಂದ ಕಲುಗಳನ್ನು ಹುಡಿಮಾಡಿದ ಕುರುಹುಗಳಿವೆ. ಇದೆಲ್ಲಾ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಗೋಚರಿಸುತ್ತದೆ. ಇದರ ಜೊತೆಗೆ ಇಲ್ಲಿ ಚೌಕಾಕಾರದ ಗುಂಡಿಯಿಂದ ಮಣ್ಣು ತೆಗೆಯಲು ಬೆತ್ತದಿಂದ ತಯಾರಿಸಿದ ರಾಟೆ , ತಿಂಡಿ ತಿನಿಸುಗಳ ಪೊಟ್ಟಣ, ಬಟ್ಟೆ ,ಗುದ್ದಲಿಗಳು ಕೂಡಾ ಇರುವುದು ದಂಧೆಕೋರರ ಇರುವಿಕೆಯನ್ನು ಸೂಚಿಸುತ್ತದೆ. ಮೂಲಗಳ ಪ್ರಕಾರ ಇಲ್ಲಿ ದೊರಕುವ ಹರಳುಕಲ್ಲಿಗೆ ಪ್ರತೀ ಕೆಜಿಗೆ ಸುಮಾರು 2500 ರಿಂದ 5000 ರೂಪಾಯಿವರೆಗೂ ರೇಟು ಇದೆ ಎಂಬ ಮಾಹಿತಿ ಸಿಗುತ್ತದೆ.
ಇಲಾಖೆಗೆ ಗೊತ್ತಿಲ್ಲವೇ ? ಬಿಸಲೆಯ ಈ ಪ್ರದೇಶದಲ್ಲಿ ಆರಂಭವಾಗಿರುವ ಈ ಹರಳು ಕಲ್ಲು ದಂಧೆಯ ಬಗ್ಗೆ ನಮ್ಮ ಕಾಡು ಇಲಾಖೆಗೆ ಗೊತ್ತಿಲ್ಲವೇ ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತದೆ.ಹೊರಜಗತ್ತಿಗೆ ಗೊತ್ತಾಗದ ರೀತಿಯಲ್ಲಿ ಈ ದಂಧೆ ನಡೆಯುವುದಾದರೂ ಹೇಗೆ ?. ಇಲ್ಲಿ ಬಹುವಿಸ್ತಾರವಾದ ಈ ಅರಣ್ಯದಲ್ಲಿ ಅದೂ ರಸ್ತೆಯಿಂದ ಸುಮಾರು 7 ರಿಂದ 8 ಕಿಮೀ ದೂರ ನಡೆದುಕೊಂಡು ಹೋಗಿ ಈ ಕೆಲಸ ಮಾಡುವಾಗಲೂ ನಮ್ಮ ಇಲಾಖೆಗೆ ಗೊತ್ತಿಲ್ಲ.ಏಕೆಂದರೆ ಇಲ್ಲಿ ಕಾಡಿನೊಳಗೆ ಇಲಾಖೆಯವರ ಪ್ರವೇಶವೇ ಕಡಿಮೆ ಎನ್ನುವುದು ಇಲ್ಲಿ ತಿಳಿಯುತ್ತದೆ.ಇದನ್ನೇ ದಂಧೆಕೋರರು ತಮ್ಮ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ ಅಷ್ಟೇ.ಇದರ ಜೊತೆಗೆ ಇಲಾಖೆಯೊಂದಿನ ಒಳ ಒಪ್ಪಂದವೂ ಇದಕ್ಕೆ ಕಾರಣ ಇರಬಹುದು ಎಂಬ ಮಾತುಗಳು ಪರಿಸರ ಪ್ರೇಮಿಗಳಿಂದ ಕೇಳಿಬಂದಿದೆ.ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಈ ಪ್ರದೇಶವೂ ಕೂಡಾ ಕೂಜಿಮಲೆಯಂತೆ ವ್ಯಾಪಕವಾಗಿ ಅರಣ್ಯ ನಾಶವಾಗುವುದು ಖಚಿತ ಎಂದು ಪರಿಸರ ಪ್ರೆಮಿಗಳು ಎಚ್ಚರಿಸಿದ್ದಾರೆ. ಒಂದು ಕಡೆ ಪುಷ್ಟಗಿರಿ ವನ್ಯಧಾಮದ ಬಗ್ಗೆ ಆಸಕ್ತವಾಗಿರುವ ಅರಣ್ಯ ಇಲಾಖೆಗಳು, ಜನರಿಗೆ ಸರಿಯಾದ ಮಾಹಿತಿ ನೀಡದೆ ಇದ್ದರೆ ಇನ್ನೊಂದು ಕಡೆ ಸನಿಜವಾದ ಕಾಡುಗಳು ಈಗ ಯಾವುದಿದೆ ಅದರ ರಕ್ಷಣೆಗೆ ಮುಂದಾಗದೇ ಇರುವುದು ಇನ್ನೊಂದು ದೊಡ್ಡ ವಿಪರ್ಯಾಸ.ಇರುವ ಕಾಡನ್ನೇ ರಕ್ಷಿಸಲಾಗದೆ ಇನ್ನಷ್ಟು ಕಾಡನ್ನು ಸೇರ್ಪಡೆಗೊಳಿಸಿ ಅದೆಲ್ಲವೂ ವಿನಾಶದಂಚಿಗೆ ತರುವುದಕ್ಕೆ ಮುನ್ನ ಇಂತಹ ದಂಧೆಗಳಿಗೆ ಕಡಿವಾಣ ಹಾಕಬೇಕಾಗಿದೆ.

29 ನವೆಂಬರ್ 2011

ಇದು ಭಕ್ತಿ , ನಂಬಿಕೆ ಪ್ಲೀಸ್ ಇದಕ್ಕೆ ಧಕ್ಕೆ ಮಾಡಬೇಡಿ. .

ನಾಡಿನ ಅತ್ಯಂತ ಶ್ರದ್ಧಾ ಭಕ್ತಿಯ ತಾಣ ಕುಕ್ಕೆ ಸುಬ್ರಹ್ಮಣ್ಯ. ಈ ಕ್ಷೇತ್ರಕ್ಕೆ ಹಿಂದೆ ಕ್ರಿಕೆಟ್ ತಾರೆ ಸಚಿನ್ ತೆಂಡೂಲ್ಕರ್ ಭೇಟಿ ನೀಡಿದ್ದರು.ಆಗ ಭುಜ ನೋವಿನಿಂದ ಬಳಲುತ್ತಿದ್ದ ಸಚಿನ್ ಇಂದು ಶತಕದ ಶತಕ ಬಾರಿಸುವ ಹಂತದಲ್ಲಿದ್ದಾರೆ. ಸಚಿನ್ ಬಳಿಕವೂ ಕುಕ್ಕೆಗೆ ವಿವಿ‌ಐಪಿಗಳ ಭೇಟಿಯಿಂದ ಇಡೀ ದೇಶದಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸುದ್ದಿ ಮಾಡಿತ್ತು.

ಈಗ ಮತ್ತೆ ಇನ್ನೊಂದು ರೀತಿಯಲ್ಲಿ ದೇಶದಾದ್ಯಂತ ಸುದ್ದಿಯಾಗುತ್ತಿದೆ.

ಇದು ಮಾತ್ರಾ ಭಕ್ತಾದಿಗಳ ನಂಬಿಕೆಯ ಮೇಲೆ ನಡೆಯುತ್ತಿರುವ ಮಾನಸಿಕ ಧಾಳಿ ಎಂದರೆ ತಪ್ಪಾಗಲಾರದು.ಯಾಕೆ ಹೀಗೆ ? ಬೇಕಾ ಈ ಚರ್ಚೆ ?. ದೇಶದಲ್ಲಿ ಅದೆಷ್ಟೋ ಸಮಸ್ಯೆಗಳು ತಾಂಡವವಾಡುತ್ತಾ ಇದೆ. ಈ ಬಗ್ಗೆ ಏಕೆ ಇವರೆಲ್ಲಾ ಮಾತನಾಡೊಲ್ಲ ? ಕಳೆದ ವರ್ಷ ನಡೆದ ಚರ್ಚೆಯ ವೇಳೆಯೂ ಇಲ್ಲಿನ ಸತ್ಯಾಂಶವನ್ನು ತಿಳಿಸಲು ಯಾರಿಗೂ ಸಾಧ್ಯ ಆಗಿರಲಿಲ್ಲ.ಈ ಬಾರಿಯೂ ಅದೇ ಆಗುತ್ತಿದೆ.ಈ ಒಟ್ಟಾರೆ ಬೆಳವಣಿಗೆಗಳ ಬಗ್ಗೆ ಇಲ್ಲಿ ನನಗೆ ಅಭಿಪ್ರಾಯ ದಾಖಲಿಸಬೇಕು ಎಂದು ನನಗೆ ಅನ್ನಿಸಿದೆ.

ಈ ದೇಶದ ತುತ್ತ ತುದಿಯಲ್ಲಿ ದಿನವೂ ಜನ ಹೆದರಿಕೆಯಿಂದ ಬದುಕುತ್ತಿದ್ದಾರೆ. ಮನೆಯಿಂದ ಹೊರಗಡೆ ದಿನವೂ ಗುಂಡಿನ ಸದ್ದು ಕೇಳುತ್ತಿದೆ.ಅದೆಷ್ಟೋ ಅಮಾಯಕ ಹೆಣ್ಣು ಮಕ್ಕಳನ್ನು ಅತ್ಯಾಚಾರವೆಸಗಿ ಕೊಲ್ಲುತ್ತಿದ್ದಾರೆ.ಸರಕಾರಗಳು ಇದ್ದೂ ಇಲ್ಲದಂತಗಿದೆ. ನಮ್ಮ ಜವಾನರು ಮೈಯೆಲ್ಲಾ ಕಣ್ಣಾಗಿ ಕಾಯುತ್ತಿದ್ದರೂ ಅವರನ್ನು ತಪ್ಪಿಸಿ ಒಳನುಗ್ಗುತ್ತಲೇ ಇದ್ದಾರೆ ಆ ದ್ರೋಹಿಗಳು. ಇನ್ನೊಂದು ಕಡೆ ದೇಶದ ಒಳಗೆಲ್ಲಾ ಭಯವನ್ನು ಉತ್ಪಾದಿಸಲಾಗುತ್ತಲೇ ಇದೆ.ಅಂತಹವರಲ್ಲೊಬ್ಬ ಅಂದು ಸಿಕ್ಕಿಬಿದ್ದಿದ್ದಾನೆ, ಆತನಿಗೆ ರಾಯಲ್ ಟ್ರೀಟ್‌ಮೆಂಟ್ ಇಂದಿಗೂ ನಮ್ಮ ದೇಶದಿಂದ ಸಿಗುತ್ತಿದೆ, ಮತ್ತೊಂದು ಕಡೆ ನಮ್ಮ ದೇಶದ ಆಡಳಿತ ಸೌಧಕ್ಕೆ ಧಾಳಿ ಮಾಡಿದವರೂ ಇದ್ದಾರೆ. ಇವರೆಲ್ಲಾ ಇಂದಿಗೂ ಇಂಚು ಇಂಚಾಗಿ , ಹೆಜ್ಜೆ ಹೆಜ್ಜೆಗೂ ದೇಶಕ್ಕೆ ಕಾಟ ಕೊಡುತ್ತಲೇ ಇರಬೇಕಾದರೆ ಸರಕಾರಗಳು ಅದೇಕೋ ಏನೋ ಯಾವುದೂ ಕಂಡೂ ಕಾಣದಂತೆ, ಕುಳಿತಿವೆ ಅಂತ ಕಾಣುತ್ತೆ.

ಬಿಡಿ, ಅದೆಲ್ಲಾ ಆಡಳಿತಕ್ಕೆ , ರಾಜಕೀಯಕ್ಕೆ ಸಂಬಂಧಿಸಿದ ವಿಚಾರ. ಪರಿಸ್ಥಿತಿ ಹೀಗೆ ಇರುವಾಗ ಇಲ್ಲಿನ ಜನರಿಗೆ ನೆಮ್ಮದಿ ಬೇಕಲ್ಲಾ , ಅವರು ಎಲ್ಲಿಗೆ ಹೋಗೋದು ಹೇಳಿ ?. ನೆಮ್ಮದಿ ಅರಸಿಕೊಂಡು ಹೋಗಲು ಆಗುತ್ತೆಯೇ ?.ಒಂದು ಕಡೆ ಧಾರ್ಮಿಕ ಕೇಂದ್ರಗಳ ಮೇಲೆ ಧಾಳಿ ನಡೆಯುತ್ತಲೇ ಇರುತ್ತವೆ ಅಲ್ಲೂ ಹೋಗೋದಾದ್ರೂ ಹೇಗೆ?. ಕೆಲವರಿಗೆ ಟೀಕೆ ಮಾಡುವುದರಲ್ಲಿ , ಇನ್ನೂ ಕೆಲವರಿಗೆ ವಿರೋಧಿಸುವುದರಲ್ಲಿ , ಇನ್ನೂ ಕೆಲವರಿಗೆ ರಾಜಕೀಯ ಮಾಡುವುರದಲ್ಲಿ , ಇನ್ನೂ ಅನೇಕರಿಗೆ ವಿವಾದ ಮಾಡುವುದರಲ್ಲಿ ನೆಮ್ಮದಿ ಸಿಗಬಹುದು. ಆದರೆ ಈ ದೇಶದ ಶೇಕಡಾ 80 ರಷ್ಟು ಜನ ಇಲ್ಲಿನ ದೇವರ ಮೊರೆ ಹೋಗಿದ್ದಾರೆ. ಅದು ರಾಮ , ರಹೀಮ, ಏಸು ಇನ್ಯಾವುದೇ ದೇವರ ಮೊರೆ ಹೋಗಿದ್ದಾರೆ,ಹೋಗುತ್ತಿದ್ದರೆ. ಅಲ್ಲಿ ಅದ್ಯಾವುದೋ ಆಚರಣೆಗೋ ನಂಬಿಕೆಗೋ ಒಳಪಟ್ಟು ಬದುಕಿನಲ್ಲಿ ನೆಮ್ಮದಿ ಕಂಡುಕೊಳ್ಳುತ್ತಾನೆ.ತಾನು ಮಾಡಿದ ಸೇವೆಯಲ್ಲಿ ತೃಪ್ತಿಯನ್ನು ಕಾಣುತ್ತಾನೆ.ಇದರಲ್ಲಿ ತಪ್ಪಿಲ್ಲವಲ್ಲ. ಏಕೆಂದರೆ ಶೇ.80 ರಷ್ಟು ಜನರಿಗೆ ಇಂತಹ ಆಚರಣೆಯಲ್ಲಿ ನಂಬಿಕೆ ಇದೆ.ಉಳಿದ ಶೇ.20 ರಷ್ಟು ಜನರಿಗೆ ಇಂತಹ ಸಂಗತಿಗಳಲ್ಲಿ ನಂಬಿಕೆ ಇಲ್ಲ, ಎಂದಾದರೆ ಬಿಡಿ ಒಪ್ಪಿಕೊಳ್ಳೋಣ. ನೀವೂ ಇದನ್ನೇ ಮಾಡಿ ಅಂತ ಯಾರಾದರೂ ಅವರಿಗೆ ಹೇಳಿದ್ದಾರಾ ? ಹೇಳುತ್ತಾರಾ? ಮತ್ಯಾಕೆ ಅವರಿಗೆ ತಲೆನೋವು?. ನಂಬಿಕೆ ಇಲ್ಲದ ಮೇಲೆ ನಾವು ನಿಮ್ಮ ಆಚರಣೆಗೋ ನಂಬಿಕೆಗೋ ಏಕೆ ಅಡ್ಡಿ ಬರಬೇಕು?. ಅದರಿಂದಾಗಿ ಇಡೀ ದೇಶಕ್ಕೋ ಸಮಾಜಕ್ಕೋ ಏನಾದ್ರೂ ತೊಂದರೆ ಇದೆಯೇ ?. ಅಲ್ಲಿನ ಭಯೋತ್ಪಾದಕರಂತೆಯೋ, ಕಾಶ್ಮೀರದ ಸಮಸ್ಯೆಯಂತೆಯೋ ಏನಾದರೂ ಇಡೀ ದೇಶಕ್ಕೆ ತೊಂದರೆಯಾಗುತ್ತೋ?. ಹಾಗಾದ್ರೆ ಸರಿ.ಇಂದೇ ಅದು ಅಂತಹ ಪದ್ಧತಿಗಳು ನಿಲ್ಲಬೇಕು.
ಸರಿ ಇದು ನಾಗರಿಕ ಸಮಾಜಕ್ಕೆ ಅವಮಾನ ಎನ್ನೋಣ , ಶೇ.80 ರಷ್ಟು ಮಂದಿ ಈ ಆಚರಣೆಗಳನ್ನು , ಪದ್ಧತಿಗಳನ್ನು ಒಪ್ಪುವುದಾರೆ ಕೇವಲ ಶೇ.20 ರಷ್ಟು ಮಂದಿಗಾಗಿ ಈ ಆಚರಣೆಯನ್ನು ಏಕೆ ನಿಲ್ಲಿಸಬೇಕು?. ಅಂತಹ ಮಂದಿ ಇದೇ ದೇವಸ್ಥಾನ , ದೇವರನ್ನು ಒಪ್ಪುವವರೂ ಅಲ್ಲ. ಆದರೆ ಈ 80 ಶೇಕಡಾ ಮಂದಿ ಇದೆಲ್ಲವನ್ನೂ ಸಹಿಸಿಕೊಂಡು ಇರೋದ್ರಿಂದಲೇ ಇದೆಲ್ಲಾ ನಡೀತದೆ. ಇನ್ನೊಂದು ನಾನು ಗಮನಿಸಿದಂತೆ ಇದೆಲ್ಲಾ ಹಿಂದೂ ಆಚರಣೆಗಳಲ್ಲಿ ಮಾತ್ರಾ ಅನ್ವಯವಾಗಿದೆ. ಅನ್ವವಾಗುತ್ತಿದೆ. ಯಾರೋಬ್ಬರೂ ಕೂಡಾ ಇತರ ಆಚರಣೆಗಳ ಬಗ್ಗೆ ಮಾತನಾಡಿದ್ದು ನನಗೆ ಗೊತ್ತಿಲ್ಲ.. . !.

ಸರಿ ಈಗ ಕುಕ್ಕೆಯ ವಿಚಾರವನ್ನು ನೋಡುವುದಾದರೆ , ಇಲ್ಲಿ ಸಮಸ್ಯೆ ಬಂದಿರೋದು ಬ್ರಾಹ್ಮಣರ ಎಂಜಲೆಲೆಯ ಮೇಲೆ ಶೂದ್ರರು ಮಾತ್ರಾ ಉರುಳಾಡುತ್ತಾರೆ ಅಂತ. ಇದು ಪೂರ್ವಾಗ್ರಹ ಪೀಡಿತ ಕೆಲವು ಮಾಧ್ಯಮಗಳ ಕತೆ. ಇಲ್ಲಿ ಬ್ರಾಹ್ಮಣರಿಂದ ತೊಡಗಿ ಎಲ್ಲರೂ ಈ ಎಂಜಲೆಲೆಯ ಮೇಲೆ ಉರುಳುತ್ತಾರೆ ಅನ್ನೊಂದು ಪ್ರಥಮ ವಿಚಾರ. ಕಳೆದ ವರ್ಷವೂ ಈ ಆಚರಣೆಗೆ ವಿರೋಧ ಬಂದಿತ್ತು. ಕುಕ್ಕೆಗೆ ಬಂದ ಇವರು ಇಲ್ಲಿನ ವಾಸ್ತವ ಅರಿತು ಹೇಳಿದರು , “ಇಲ್ಲಿ ಬ್ರಾಹ್ಮಣರೂ ಉರುಳುತ್ತಾರೆ ಎಂತ ಗೊತ್ತಿರಲಿಲ್ಲ ,ಕೇವಲ ಶೂದ್ರರು ಮಾತ್ರಾ ಉರುಳುತ್ತಾರೆ ಎಂದು ತಿಳಿದಿದ್ದೆವು” ಎಂದಿದ್ದರು. ಆದರೆ ಇಲ್ಲಿನ ಒಬ್ಬರು ಪತ್ರಕರ್ತರು ಅವರಿಗೆ ತಪ್ಪು ಮಾಹಿತಿ ನೀಡಿದ್ದರು ಎಂದು ಅವರಲ್ಲೊಬ್ಬರು ಹೇಳಿದ್ದರು. ಆ ಪತ್ರಕರ್ತರೇ ನಂತರ ಪೊಲೀಸ್ ರಕ್ಷಣೆಯೊಂದಿಗೆ ಅವರನ್ನು ಕುಕ್ಕೆಯಿಂದ ಕಳುಹಿಸಿದ್ದರು ಎಂಬುದು ಬೇರೆ ಮಾತು.

ಇಲ್ಲಿ ನಾನು ನೋಡಿದ ಪ್ರಕಾರ ಹೀಗೆ ನಡೆಯುತ್ತದೆ , ಕುಕ್ಕೆ ದೇವಸ್ಥಾನದಲ್ಲಿ ಚಂಪಾಷಷ್ಠಿಯ 3 ದಿನಗಳ ಕಾಲ ಅತ್ಯಂತ ಮಹತ್ವದ ಕಾಲ. ಈ ಬಗ್ಗೆ ಪುರಾಣಗಳಲ್ಲೂ ಉಲ್ಲೇಖ ಇದೆ. ಈ 3 ದಿನಗಳ ಕಾಲ ದೇವರಿಗೆ ಪೂಜೆಯಾದ ಬಳಿಕ ಕೊಪ್ಪರಿಗೆ ಅನ್ನಕ್ಕೆ ಪೂಜೆ ಇರುತ್ತದೆ.ಇದು ಪಲ್ಲ ಪೂಜೆ. ಪೂಜೆಯ ನಂತರ ಈ ಅನ್ನವನ್ನು ದೇವಸ್ಥಾನತದಲ್ಲಿ ಸಂತರ್ಪಣೆ ಮಾಡುವ ಎಲ್ಲಾ ಕಡೆ ಪ್ರದೇಶಗಳಿಗೆ ಅನ್ನವನ್ನು ಕೊಂಡೋಗಿ ಅಲ್ಲಿ ತಯಾರು ಮಾಡಿದ ಅನ್ನಕ್ಕೆ ಹಾಕುತ್ತಾರೆ. ಈ ಎಲ್ಲಾ ಕಾರ್ಯಕ್ರಮದ ಬಳಿಕ ದೇವಸ್ಥಾನದ ಹೊರಾಂಗಣದಲ್ಲಿ ಬ್ರಾಹ್ಮಣ ಸಂತರ್ಪಣೆ ಇರುತ್ತದೆ. ಎಲ್ಲರೂ ಕುಳಿತುಕೊಂಡ ಬಳಿಕ ದೇವರಿಗೆ ಅರ್ಚನೆ, ಬ್ರಾಹ್ಮಣ ಅರ್ಚನೆ ನಡೆದು ಸುಬ್ರಹ್ಮಣ್ಯನ ಹೆಸರಲ್ಲಿ ಸಂಕಲ್ಪ ನಡೆದು ಊಟ ಶುರುವಾಗುತ್ತದೆ. ಊಟದ ನಂತರ ಮತ್ತೆ ಸಂಕಲ್ಪ ನಡೆದು ದೇವರಿಗೆ ಗಂಟೆ ಬಡೆಯಲಾಗುತ್ತದೆ. ಇದಾದ ನಂತರ ಎಲ್ಲರೂ ಬಂದು ಈ ಎಲೆಯ ಮೇಲೆ ಉರುಳುತ್ತಾರೆ. ಇದರಲ್ಲಿ ಜಾತಿ ಎಂಬುದೇ ಇಲ್ಲ. ಕೆಲವೊಮ್ಮೆ 2000 ಜನ ಇರುತ್ತಾರೆ. ಇಲ್ಲಿ ಬಹುತೇಕ ಮಂದಿ ಈ ಸೇವೆ ಮಾಡಿದವರು ಒಂದಿಲ್ಲೊಂದು ಸಮಸ್ಯೆಯಿಂದ ಮುಕ್ತಿ ಪಡೆದವರೇ ಹೆಚ್ಚು. ಅದರಲ್ಲಿ ನಿವೃತ್ತ ನ್ಯಾಯಧೀಶರೂ ಕೆಲವೊಮ್ಮೆ ಇರುತ್ತಾರೆ ಎಂಬುದು ಕೂಡಾ ಗಮನಾರ್ಹ. ಹೀಗೆ ಈ ಸೇವೆಯ ಹೇಳಿಕೊಂಡದ್ದರಿಂದ ಅನೇಕರಿಗೆ ಮಾನಸಿಕವಾದ ನೆಮ್ಮದಿ ಸಿಕ್ಕಿದೆ. ಆ ನೆಮ್ಮದಿಯನ್ನು ತಡೆಯಲು ನಾವ್ಯಾರು ?. ಅವರ ಮಾನಸಿಕ ನೆಮ್ಮದಿ ಕಿತ್ತುಕೊಳ್ಳುವ ಹಕ್ಕು ನಮಗಿದೆಯೇ ?.





ಅದೇ ರೀತಿ ಇಲ್ಲಿ ಇನ್ನೊಂದು ಸೇವೆ ಇದೆ, ಕುಮಾರಧಾರಾ ನದಿಯಿಂದ ಸುಮಾರು 2.5 ಕಿಮೀ ದೂರ ಡಾಮರು ರಸ್ತೆಯಲ್ಲಿ ಉರುಳಿಕೊಂಡು, ಎಲ್ಲರೂ ರಸ್ತೆಯಲ್ಲಿ ಉಗುಳಿದ , ವಾಹನಗಳಿಂದ ಸುರಿದ ಎಣ್ಣೆಯ , ಚಪ್ಪಲಿಯಿಂದ ಮೆಟ್ಟಿದ ಡಾಮರು ರಸ್ತೆಯ ಮೇಲೆ ಉರುಳಿಕೊಂಡು ಬರುತ್ತಾರೆ. ಕೆಲವರಿಗೆ ಸುಮಾರು ೪ ಗಂಟೆ ಕಾಲ ತಗುಲುತ್ತದೆ ದೇವಸ್ಥಾನ ತಲುಪಲು.ಇದರಲ್ಲೂ ಮಾನಸಿಕ ನೆಮ್ಮದಿ ಸಿಗುತ್ತದೆ ಭಕ್ತರಿಗೆ.

ಹೀಗೆ ಸುಖಾಸುಮ್ಮನೆ ಒಂದು ನಂಬಿಕೆಯ ವಿರುದ್ದ ಮಾತನಾಡುತ್ತಾ, ಮಾನಸಿಕ ನೆಮ್ಮದಿಯನ್ನು ಕೆಡವಿ ಹಾಕಬಾರದು ಎನ್ನುವುದು ನನ್ನ ನಂಬಿಕೆ. ಏಕೆಂದರೆ ಇದೆಲ್ಲಾ ಸ್ವಯಂ ಪ್ರೇರಣೆಯಿಂದಲೇ ಆಗಬೇಕು.ಒತ್ತಾಯ ಬೇಕಿಲ್ಲ.ಮಾಡುವುದೂ ತರವಲ್ಲ.

ಹೀಗೆ ಮಾತನಾಡುವುದಾದರೆ ಅದ್ಯಾವುದೋ ಮಸೀದಿಯಲ್ಲಿ ನೀರಿಗೆ ಉಗುಳಿ ಅಲ್ಲಿನ ಮೌಲ್ವಿ ಕೊಡುತ್ತಾರೆ. ಇದನ್ನೇ ತೀರ್ಥ ಅಂತ ಲೀಟರ್ ಲೀಟರ್ ಕ್ಯಾನ್‌ಗಳಲ್ಲಿ ತುಂಬಿಕೊಂಡು ಹೋಗಿ ಕುಡಿಯುತ್ತಾರೆ, ರೋಗ ಮುಕ್ತರಾಗುತ್ತಾರೆ. ಮತ್ತೊಂದು ಕಡೆ ಸೈತಾನನ್ನು ಬಿಡಿಸುತ್ತಾರೆ, ಪಾಪ ಕಳೆಯಲಿ ಎಂದು ಪ್ರಾಣಿ ಬಲಿ ನಡೆಸುತ್ತಾರೆ, ಕೋಳಿ ಬಲಿ ನಡೆಯುತ್ತದೆ ಇದಕ್ಕೆಲ್ಲಾ ಏನೆನ್ನವುದು?

ಹಾಗೆ ನೋಡುತ್ತಾ ಹೋದರೆ ತುಳುನಾಡಿನ ಎಲ್ಲಾ ಆಚರಣೆಗಳೂ ಕೂಡಾ ಶೋಷಣೆ ಮುಕ್ತ ಎನ್ನಲು ಆಗುತ್ತಾ ?. ದೈವಾರಾಧನೆಯಲ್ಲಿ ಕೂಡಾ ದೈವ ಪಾತ್ರಿ ಯಾರು ?.ಇಲ್ಲಿ ಶೋಷಣೆ ಅನ್ನೋದಕ್ಕಿಂತಲೂ ಹೆಚ್ಚು ಅದರಿಂದಾಗಿ ಜನರಿಗೆ ನೆಮ್ಮದಿ ಸಿಗುತ್ತಿದೆ, ಖುಷಿ ಪಡುತ್ತ್ತಾರೆ ಅಷ್ಟೇ. ಅಂತಹ ಶಕ್ತಿಯೊಂದು ಇನ್ನೂ ಹತ್ತಾರು ವರ್ಷಗಳ ಕಾಲ ರೋಗಮುಕ್ತ ಜೀವನ ನಡೆಸಲು ಅವರಿಗೆ ಸಹಕಾರಿಯಾಗುತ್ತದೆ. ಒಂದು ನಂಬಿಕೆ , ಆಚರಣೆಯ ಹಿಂದೆ ಇಂತಹದ್ದೆಲ್ಲಾ ಇರುತ್ತದೆ.ಇದನ್ನೆಲ್ಲಾ ಅಷ್ಟು ಸುಲಭವಾಗಿ ತೊಡೆದು ಹಾಕುವುದು , ಇದೆಲ್ಲಾ ಪುರೋಹಿತ ಶಾಹಿ ಎಂದೆಲ್ಲಾ ಅನಾವಶ್ಯಕ ವಿವಾದ ಎಬ್ಬಿಸುವುದರ ಬದಲು ಸಮಾಜವನ್ನು ಒಂದುಗೂಡಿಸುತ್ತಾ ಮಾನಸಿಕ ಪರಿವರ್ತನೆ ಮಾಡಬೇಕಾಗಿದೆ ಅಂತ ನನಗೆ ಅನಿಸುತ್ತದೆ.

15 ನವೆಂಬರ್ 2011

ಆತನೂ ಅನಿವಾರ್ಯ. . .

ನನಗೆ ಅನೇಕ ಬಾರಿ ಅನಿಸಿದ್ದಿದೆ,

ಈ ವಿಶಾಲವಾದ ಜಗತ್ತಿನಲ್ಲಿ ನಾವೆಲ್ಲಾ ಎಷ್ಟು ಸಣ್ಣವರು.ಆದರೂ ಎಂತಹ ಅಹಂಕಾರ ನಮಗೆ.ಒಂದು ಕ್ಷಣವೂ ಪೂರ್ವಾಗ್ರಹವಿಲ್ಲದ ಮನಸ್ಸಿನಿಂದ ನಾವು ಯೋಚಿಸಿದ್ದೇ ಇಲ್ಲ.ಏನೇ ಮಾತನಾಡಲಿ , ಯಾರೇ ಮಾತನಾಡಲಿ ಅದರಲ್ಲೊಂದು ಕುಹಕ, ಆ ಸಂಗತಿಯನ್ನು ಪೂರ್ಣ ಮನಸ್ಸಿನಿಂದ ಮೌನವಾಗಿ ಆಲಿಸಿ ಆ ಬಳಿಕ ಪ್ರತಿಕ್ರಿಯಿಸಲು ಹೋಗುವುದೇ ಇಲ್ಲ , ಅದಕ್ಕೂ ಮುನ್ನ ನಮ್ಮದೇ ಆದ ತೀರ್ಮಾನ ಮಾಡಿಯೇ ಬಿಡುತ್ತೇವೆ.ಹೀಗಾಗಿ ಅನೇಕ ಸಂಗತಿಗಳು ನಮಗೆ ಅರಿವೇ ಆಗುವುದಿಲ್ಲ. ನನಗೂ ಅನೇಕ ಬಾರಿ ಇಂತಹದ್ದೇ ಅನೇಕ ಸಂಗತಿಗಳು ಆಗಿವೆ. ಇದರಿಂದಾಗಿ ನನಗೇ ಮಾಹಿತಿಯ ಕೊರತೆ ಆದದ್ದಿದೆ.ಇದಕ್ಕೆ ಮೌನವಾಗಿ ಕೇಳದೇ ಇದ್ದದ್ದು ಕೂಡಾ ಕಾರಣ.ಮೌನವಾಗಿ ಯಾರು ಕೇಳುತ್ತಾರೆ ಅವರಿಗೆ ಹೆಚ್ಚು ಹೆಚ್ಚು ಮಾಹಿತಿಗಳು ಸಿಗುತ್ತವೆ ಅಂದುಕೊಳ್ಳುತ್ತೇನೆ. ಆ ಬಳಿಕವೇ ಮಾತನಾಡಬೇಕು ಎನ್ನವುದನ್ನು ನಾನು ಈಗೀಗ ಅರ್ಥ ಮಾಡಿಕೊಳ್ಳುತ್ತಿದ್ದೇನೆ.

ಅದರ ಜೊತೆಗೆ ಅನೇಕರಿಗೆ ಅವರ ಉದ್ಯೋಗದಲ್ಲಿ ಕೀಳರಿಮೆ.ಮೊನ್ನೆ ಒಂದು ಘಟನೆ ನಡೆಯಿತು. ನನ್ನ ವಾಹದ ಟಯರ್ ಪಂಕ್ಚರ್ ಆಯಿತು.ಅಂದು ಭಾನುವಾರ ಬೇರೆ.ನನಗಂತೂ ಅದು ತೀರಾ ಅಗತ್ಯ, ಅನಿವಾರ್ಯ ಕೂಡಾ. ನನ್ನ ಪರಿಚಯದವರಿಗೆ ಫೋನು ಮಾಡಿ ವಿಚಾರಿಸಿದಾಗ ಇಂದು ಯಾರೊಬ್ಬರೂ ಇಲ್ಲ ಎಂದರು.ಕೊನೆಗೆ ಸ್ವಲ್ಪ ದೂರದಲ್ಲಿ ಒಬ್ಬರು ಇದ್ದಾರೆ ಅವರ ಮನೆ ಅಲ್ಲೇ ಎಂದು ಹೇಳಿದ ಕಾರಣ ಆ ಜಾಗಕ್ಕೆ ಬೇರೆ ವಾಹನದಲ್ಲಿ ಹೋದೆ. ಆ ಗ್ಯಾರೇಜ್ ಮಾಲಕ ಅಂತೂ ಕೆಲಸ ಮಾಡಿಕೊಟ್ಟ. ಆ ಬಳಿಕ ಆತ ಹೇಳಿದ, ತನ್ನ ಸಂಕಷ್ಟ ಹೇಳಿಕೊಳ್ಳುತ್ತಾ, ನಮ್ಮ ಕೆಲಸ ಇದೇ ಅಲ್ಲವಾ , ಯಾರ‍್ಯಾರದ್ದಾರೂ ಕಾರು ಟಯರ್ ಬಿಚ್ಚಿ ಕೂಡಿಸುವುದಲ್ವಾ ? ಅಂತ ಹೇಳಿದ.
ಇದರಲ್ಲಿ ಆತನ ಒಳಗಿದ್ದ ಕೀಳರಿಮೆ ಅರಿವಾಯಿತು.

ನನಗನ್ನಿಸಿದ್ದು ಈ ಕೀಳರಿಮೆ ಏಕೆ ಅಂತ?. ಆತನ ಉದ್ಯೋಗ ಯಾವುದೇ ಇರಲಿ , ಆತ ಅನಿವಾರ್ಯವೇ. ಒಬ್ಬ ಟಯರ್ ಪಂಕ್ಚರ್ ಹಾಕುವವನು ಇಲ್ಲಿ ಇಲ್ಲ ಅಂತಾಗಿದ್ರೆ ಎಷ್ಟು ವಾಹನಗಳು ರಸ್ತೆಯಲ್ಲೇ ಉಳಿದುಕೊಳ್ಳುತ್ತಿತ್ತು?. ಒಬ್ಬ ಮೆಕ್ಯ್ಯಾನಿಕ್ ಇಲ್ಲಾ ಅಂದ್ರೆ ಎಷ್ಟು ಕಷ್ಟ ?. ಹೀಗೇ ಎಲ್ಲಾ ಕೆಲಸದವರೂ ಇಲ್ಲಿ ಅನಿವಾರ್ಯವೇ . ಹಾಗಾಗಿ ಅವನ ಆತ್ಮಗೌರವ ಇದ್ದೇ ಇರುತ್ತದೆ. ಆದರೆ ಅಲ್ಲಿ ಇರಬೇಕಾದದ್ದು ಪ್ರಾಮಾಣಿಕತೆ ಮಾತ್ರಾ ಅಲ್ಲವೇ?. ಹಾಗಾಗಿ ನನಗನ್ನಿಸುವುದು ಇಲ್ಲಿ ವೃತ್ತಿಗಿಂತ ಪ್ರೀತಿ ಮುಖ್ಯ ಅಂತ. ಈ ಜಗತ್ತಿನಲ್ಲಿ ಒಬ್ಬನಿಂಗ ಮತ್ತೊಬ್ಬ ಪ್ರತಿಭಾವಂತ ಇದ್ದೇ ಇರುತ್ತಾನೆ.ಹಾಗಾಗಿ ಈ ಜಗತ್ತಿನಲ್ಲಿ ನಾವೇ ಸರ್ವಶ್ರೇಷ್ಠ ಅಂತ ಅಂದುಕೊಳ್ಳುವುದಾದರೂ ಹೇಗೆ ?. ಎಷ್ಟೇ ಶ್ರೀಮಂತನಾಗಿರಲಿ ಆ ಕ್ಷಣದಲ್ಲಿ ಕಾರು ರಿಪೇರಿ ಮಾಡುವ ಮೆಕ್ಯಾನಿಕ್ ಇಲ್ಲಾಂದ್ರೆ ರಸ್ತೆಯಲ್ಲೇ ನಿಲ್ಲಬೇಕಲ್ಲಾ . . !.

12 ನವೆಂಬರ್ 2011

ಮಾರುಕಟ್ಟೆ ಕತೆ. .

ಕರಾವಳಿ ಜಿಲ್ಲೆಯ ಅಡಿಕೆ ಹಾಗೂ ರಬ್ಬರ್ ಬೆಳೆಗಾರರಿಗೆ ಈಗ ಗೊಂದಲದ ಸಮಯ. ಒಂದು ಕಡೆ ಅಡಿಕೆ ಮಾರುಕಟ್ಟೆಯಲ್ಲೀಗ ವದಂತಿಗಳದ್ದೇ ಸುದ್ದಿಯಾದರೆ ರಬ್ಬರ್ ಮಾರುಕಟ್ಟೆ ಒಂದೇ ದಿನದಲ್ಲಿ 10 ರೂಪಾಯಿ ದಿಢೀರ್ ಕುಸಿತ ಕಂಡು ಆತಂಕ ಸೃಷ್ಟಿಸಿದೆ. ಶುಕ್ರವಾರ ಕೂಡಾ ಅಂತರಾಷ್ಟ್ರೀಯ ರಬ್ಬರ್ ಮಾರುಕಟ್ಟೆ ಕುಸಿತ ಕಂಡರೆ ಭಾರತದ ರಬ್ಬರ್ ಮಾರುಕಟ್ಟೆ ಸ್ಥಿರತೆಯನ್ನು ಕಾಯದುಕೊಂಡಿದೆ. ಅಡಿಕೆ ಹಾಗೂ ರಬ್ಬರ್ ಮಾರುಕಟ್ಟೆಯ ಈ ಏರಿಳಿತಗಳು, ವದಂತಿಗಳು ತಾತ್ಕಲಿಕ ಎಂಬುದನ್ನು ಬೆಳೆಗಾರರು ಗಮನಿಸಿಕೊಳ್ಳಬೇಕಾಗಿದೆ.

ಅಡಿಕೆ ಮಾರುಕಟ್ಟೆಯಲ್ಲಿ ಈಗ ವದಂತಿಗಳು ಓಡಾಡುತ್ತಿವೆ. ಈ ವಾರ ಅಡಿಕೆ ಧಾರಣೆ ಏರಿಕೆಯನ್ನು ನಿರೀಕ್ಷಿಸಲಾಗಿತ್ತು. ಹಳೆ ಅಡಿಕೆ ಧಾರಣೆಯು ೨೦೦ ರೂಪಾಯಿ ದಾಟಿ ಮುಂದಕ್ಕೆ ಹೋಗುತ್ತದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಈಗ ಗುರುವಾರ ಬಂದರೂ ಧಾರಣೆ ಏರಿಕೆ ಕಾಣದೆ ಕೊಂಚ ಹಿಮ್ಮುಖವಾಗಿ ಕಂಡಿತು. ಇದರ ಬೆನ್ನಲ್ಲೇ ವದಂತಿಗಳು ಅಡಿಕೆ ಮಾರುಕಟ್ಟೆಯಲ್ಲಿ ಓಡಾಡತೊಗಿದೆ. ಹೀಗಾಗಿ ಆತಂಕಿತರಾದ ಬೆಳೆಗಾರರು ಅಡಿಕೆಯನ್ನು ಸಾಕಷ್ಟು ಪ್ರಮಾಣದಲ್ಲಿ ಮಾರುಕಟ್ಟೆಗೆ ಬಿಡುತ್ತಿದ್ದಾರೆ. ಇದೆಲ್ಲವೂ ಧಾರಣೆ ಏರಿಕೆಗೆ ಹಿನ್ನಡೆಯಾಗಿದೆ. ಅಡಿಕೆ ಮಾರುಕಟ್ಟೆಯ ವದಂತಿಗಳ ಪ್ರಕಾರ ಇನ್ನು ಧಾರಣೆ ಏರಿಕೆಯಾಗೋ ಲಕ್ಷಣವೇ ಇಲ್ಲ , ಇನ್ನಷ್ಟು ಕುಸಿತವಾಗುತ್ತದೆ ಎಂಬ ಗುಲ್ಲು ಹರಡುತ್ತಿದೆ. ಇದರ ಜೊತೆಗೆ ಕೇರಳ ಭಾಗದಿಂದ ಹೆಚ್ಚು ಅಡಿಕೆ ಬರುತ್ತಿದೆ ಎಂಬ ಮಾತೂ ಇದೆ. ಆದರೆ ವಾಸ್ತವವಾಗಿ ಇಂದು ಅಡಿಕೆ ಮಾರುಕಟ್ಟೆಯಲ್ಲಿ ಹಣ ಓಡಾಡುತ್ತಿಲ್ಲ. ಈ ಹಿಂದೆ ಕೂಡಾ ಇಂತಹದ್ದೇ ವಾತಾವರಣ ಸೃಷ್ಟಿಯಾಗಿ ಅಡಿಕೆ ಧಾರಣೆ ಕುಸಿತವಾಗಿತ್ತು. ಆ ನಂತರ ಏರಿಕೆ ಕಂಡಿತ್ತು. ಹೀಗಾಗಿ ಉತ್ತರ ಭಾರತ ವ್ಯಾಪಾರಿಗಳತ್ತ ಇಲ್ಲಿನ ವ್ಯಾಪಾರಿಗಳು ದೃಷ್ಟಿ ನೆಟ್ಟಿರುವುದರಿಂದ ಉತ್ತರ ಭಾರತದ ವ್ಯಾಪಾರಿಗಳು ಕೂಡಾ ಈಗ ಮಾರುಕಟ್ಟೆಯಲ್ಲಿ ಅಡಿಕೆ ಇದೆ ಎಂಬ ಲೆಕ್ಕದಲ್ಲಿದ್ದಾರೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡ ಕೆಲವರು ಅಡಿಕೆ ಧಾರಣೆ ಇಳಿಯುತ್ತಿದೆ ಎಂಬ ಸುದ್ದಿ ಹಬ್ಬಿಸುತ್ತಿದ್ದಾರೆ. ಹೀಗಾಗಿ ಬೆಳೆಗಾರರು ಹೆದರಿ ಅಡಿಕೆಯನ್ನು ಮಾರುಕಟ್ಟೆಗೆ ಬಿಡಲು ಆರಂಭಿಸಿದ್ದಾರೆ.

ಈ ನಡುವೆ ಕಳೆದ ವಾರ ಅಡಿಕೆ ಧಾರಣೆ ೨೦೦ ರೂಪಾಯಿಗೆ ತಲಪಿತ್ತು. ಈ ನಡುವೆ ಗುರುವಾರ ಸಂಜೆಯ ವೇಳೆಗೆ ಹಳೆ ಅಡಿಕೆ ಧಾರಣೆಯು 189 , ಡಬ್ಬಲ್ ಚೋಲ್ 196 ಹಾಗೂ ಈಗಿನ ಹೊಸ ಅಡಿಕೆಯು 130 ರೂಪಾಯಿಗೆ ಆವಕಗೊಂಡಿದೆ.ಶುಕ್ರವಾರ ಕೂಡಾ ಇದೇ ಆಸುಪಾಸಿನ ಧಾರಣೆ ಸ್ಥಿರವಾಗಿದೆ.ಹೆಚ್ಚಿನ ವ್ಯತ್ಯಾಸ ಕಂಡುಬಂದಿಲ್ಲ. ಈಗ ರೈತರ ಸಂಸ್ಥೆ ಕ್ಯಾಂಪ್ಕೋ ಬೆಳೆಗಾರರ ಪರವಾಗಿ ನಿಲ್ಲಬೇಕಾದ ಅನಿವಾರ್ಯತೆ ಇದೆ ಎಂಬುದು ಬೆಳೆಗಾರರ ಅನಿಸಿಕೆ.ಕಳೆದ ಹಲವಾರು ಸಮಯಗಳಿಂದಲೂ ಕ್ಯಾಂಪ್ಕೋ ಅಡಿಕೆ ಧಾರಣೆ ಹಿಂದಕ್ಕೆ ಬಾರದಂತೆ ತಡೆದಿದೆ. ಅದೇ ರೀತಿ ಈ ಬಾರಿ ಕೂಡಾ ಯಾವುದೇ ಕಾರಣಕ್ಕೂ ಕ್ಯಾಂಪ್ಕೋ ಅಡಿಕೆ ಧಾರಣೆಯನ್ನು ಇಳಿಸುವುದಿಲ್ಲ ಎಂದು ಹೇಳಿದೆ. ಗುರುವಾರದಂದು ಕ್ಯಾಂಪ್ಕೋದಲ್ಲಿ ೧೮೯ ರೂಪಾಯಿ ಇದ್ದರೆ ಇತರ ಕಡೆಗಳಲ್ಲಿ ಅಷ್ಟು ಧಾರಣೆ ಇಲ್ಲದೇ ಇದ್ದದ್ದು ಇದಕ್ಕೆ ಸಾಕ್ಷಿಯಾಗಿದೆ.ಇದರ ಜೊತೆಗೆ ಅಡಿಕೆ ಬೆಳೆಗಾರರು ಕೂಡಾ ಈಗ ದೃಢ ನಿರ್ಧಾರ ತಳೆಯಲೇಕಾಗಿದೆ.ಧಾರಣೆ ಕುಸಿತದ ವದಂತಿ ಬಂದ ತಕ್ಷಣವೇ ಅಡಿಕೆಯನ್ನು ಒಮ್ಮಲೇ ಮಾರುಕಟ್ಟೆಗೆ ಬಿಡುವುದರಿಂದ ಧಾರಣೆ ಇನ್ನಷ್ಟು ಕುಸಿತವಾಗುವುದು ನಿಶ್ಚಿತ.ಇದಕ್ಕಾಗಿ ಬೆಳೆಗಾರರೇ ಧಾರಣೆಯನ್ನು ಹಿಡಿದಿಟ್ಟುಕೊಳ್ಳಬೇಕಾಗಿದೆ. ಹೀಗಾಗಿ ಎಚ್ಚರಿಕೆ ಅಗತ್ಯ. ವ್ಯಾಪಾರಿಗಳಲ್ಲಿ ಅಡಿಕೆ ದಾಸ್ತಾನು ಇಲ್ಲದೇ ಇದ್ದಾಗಲೂ ಧಾರಣೆ ಇಳಿಕೆಯ ಆಟ ಇದ್ದೇ ಇರುತ್ತದೆ. ಹೀಗೆ ಇಳಿಸುವುದರಿಂದ ವ್ಯಾಪಾರಿಗಳಿಗೆ ನಷ್ಟವಿಲ್ಲ. ಇದೆಲ್ಲವನ್ನೂ ಬೆಳೆಗಾರರು ಎಚ್ಚರಿಕೆಯಿಂದ ಗಮನಿಸಲೇಬೇಕಾಗುತ್ತದೆ.

ಜಾರಿದ ರಬ್ಬರ್ :

ರಬ್ಬರ್ ಧಾರಣೆ ವಿಪರೀತ ಕುಸಿತ ಕಂಡಿದೆ. ಬುಧವಾರದಂದು ಸಂಜೆಯ ವೇಳೆಗೆ ಭಾರತದಲ್ಲಿ ರಬ್ಬರ್‌ಗೆ 196.5 ರೂಪಾಯಿ ಇದ್ದ ಧಾರಣೆ ಗುರುವಾರ ಸಂಜೆಯ ವೇಳೆಗೆ ಭಾರತದಲ್ಲಿ ರಬ್ಬರ್ ಧಾರಣೆಯು 186 ರೂಪಾಯಿ. ಅಂದರೆ ಒಂದೇ ದಿನದಲ್ಲಿ 10 ರೂಪಾಯಿಯಷ್ಟು ಕುಸಿತ ಕಂಡಿದೆ.ಆದರೆ ಬ್ಯಾಂಕಾಂಗ್ ರಬ್ಬರ್ ಧಾರಣೆಯು 165 ರೂಪಾಯಿಗೆ ಇಳಿದಿದೆ.ಅಲ್ಲಿ ಕಳೆದ ಒಂದು ವಾರದಿಂದಲೇ ಕುಸಿತ ಕಂಡಿದೆ. ಇನ್ನು ಕುಲಾಲಾಂಪುರದಲ್ಲಿ 158 ರೂಪಾಯಿಗೆ ಇಳಿದಿದೆ.ಒಂದೇ ದಿನದಲ್ಲಿ 20 ರೂಪಾಯಿಯ ವ್ಯತ್ಯಾಸ ಕಂಡಿದೆ.ಶುಕ್ರವಾರದಂದು ಇನ್ನಷ್ಟು ಕುಸಿತ ಕಂಡಿದೆ.ಬ್ಯಾಂಕಾಂಗ್ ಧಾರಣೆಯು 161 ರೂಪಾಯಿ ಹಾಗೂ ಕುಲಾಲಾಂಪುರ ಧಾರಣೆ 154 ರೂಪಾಯಿಗೆ ಕುಸಿದರೆ ಭಾರತದಲ್ಲಿ ಮಾತ್ರಾ ಸ್ಥಿರತೆ ಕಾಯ್ದುಕೊಂಡಿದೆ. ಶುಕ್ರವಾರ ಕೂಡಾ 186 ರೂಪಾಯಿಯಲ್ಲೇ ರಬ್ಬರ್ ಖರೀದಿಯಾಗಿದೆ.

ಕಳೆದ ಮಾರ್ಚ್ ತಿಂಗಳ ನಂತರ ಇಷ್ಟು ದೊಡ್ಡ ಪ್ರಮಾಣದಲ್ಲಿ ಇದೇ ಮೊದಲ ಬಾರಿಗೆ ರಬ್ಬರ್ ಧಾರಣೆ ಕುಸಿಯುತ್ತಿದೆ. ಇದಕ್ಕೆ ಪ್ರಮುಖ ಕಾರಣ ತೈವಾನ್ ಪ್ರವಾಹ ಕಾರಣವಾಗಿದೆ.ಇದರ ಜೊತೆಗೆ ಚೀನಾದ ಸೇರಿದಂತೆ ಜಾಗತಿಕವಾದ ಆರ್ಥಿಕ ಏರುಪೇರು ಆಗುತ್ತಿರುವ ಕಾರಣದಿಂದಾಗಿ ರಬ್ಬರ್ ಕಂಪನಿಗಳು ಕೊಂಚ ಹಿನ್ನಡೆ ಅನುಭವಿಸಿವೆ. ಹೀಗಾಗಿ ರಬ್ಬರ್ ಬಳಕೆ ಕಡಿಮೆಯಾಗಿದೆ. ಈಗ ರಬ್ಬರ್‌ಗೆ ಅಂತರಾಷ್ಟ್ರೀಯ ಮಾರುಕಟ್ಟೆ ಇರುವುದರಿಂದ ಜಾಗತಿಕ ಮಾರುಕಟ್ಟೆಯ ವ್ಯತ್ಯಾಸ ಕೂಡಾ ರಬ್ಬರ್ ಮೇಲೆ ಪರಿಣಾಮ ಬೀರುತ್ತಿದೆ. ಇತ್ತೀಚೆಗಷ್ಟೇ ಶೇರು ಮಾರುಕಟ್ಟೆ ಕುಸಿತ ಕಂಡಿರುವುದು ಕೂಡಾ ರಬ್ಬರ್ ಧಾರಣೆ ಹಿನ್ನಡೆಗೆ ಒಂದು ಕಾರಣ.ಅದರ ಜೊತೆಗೆ ಈ ವರ್ಷ ವಿವಿದ ಕಾರಣಗಳಿಂದಾಗಿ ಕಾರುಗಳ ಮಾರಾಟ ಕೂಡಾ ಕಡಿಮೆಯಾಗಿದೆ.ಈಗಿನ ಅಂದಾಜು ಪ್ರಕಾರ ದೇಶದಲ್ಲಿ ಸುಮಾರು ಶೇ.೨ ರಷ್ಟು ಕಾರು ಮಾರಾಟ ಕುಸಿತವಾಗಿದೆ. ಇನ್ನು ಟಯರ್ ಕಂಪನಿಗಳು ಕೂಡಾ ಬೇಡಿಕೆಗೆ ತಕ್ಕಷ್ಟೇ ಟಯರ್ ತಯಾರು ಮಾಡುತ್ತಿದ್ದಾರೆ. ಇನ್ನು ಚೀನಾದಂತಹ ದೇಶಗಳು ಈಗಾಗಲೇ ರಬ್ಬರ್ ದಾಸ್ತಾನು ಇರಿಸಿಕೊಂಡಿದೆ.ಇದೆಲ್ಲಾ ರಬ್ಬರ್ ಬೆಲೆ ಇಳಿಕೆಯ ಕಾರಣಗಳು.



ಆದರೆ ಇಡೀ ವಿಶ್ವದ ರಬ್ಬರ್ ಮಾರುಕಟ್ಟೆ ನೋಡಿದರೆ ರಬ್ಬರ್‌ಗೆ ಬೇಡಿಕೆ ಇದ್ದೇ ಇದೆ.ಇದೇ ಕಾರಣಕ್ಕೆ ಹಿಂದೆ ರಬ್ಬರ್ ಮಾರುಕಟ್ಟೆಯು ೨೫೦ ರೂಪಾಯಿವರೆಗೆ ತಲುಪಬಹುದೆಂದು ರಬ್ಬರ್ ಮಾರುಕಟ್ಟೆ ವಿಶ್ಲೇಷಿಸಲಾಗಿತ್ತು. ಏಕೆಂದರೆ ಇಂದು ತೈಲ ಬೆಲೆ ಏರಿಕೆಯಾಗುತ್ತಲೇ ಇರುವ ಕಾರಣದಿಂದಾಗಿ ಸಿಂಥೆಟಿಕ್ ರಬ್ಬರ್ ತೀರಾ ದುಬಾರಿಯಾಗುವ ಕಾರಣದಿಂದಾಗಿ ನೈಸರ್ಗಿಕ ರಬ್ಬರ್‌ಗೆ ಬೇಡಿಕೆ ಇದ್ದೇ ಇದೆ.ಆದರೆ ಈಗಿನ ಕೆಲವು ತಾತ್ಕಾಲಿಕ ಸಮಸ್ಯೆಗಳಿಂದಾಗಿ ಧಾರಣೆ ಇಳಿಕೆಗೊಂಡರೂ ಕೂಡಾ ಮತ್ತೆ ನಿಧಾನವಾಗಿ ಏರಿಕೆಯಾಗುವ ಎಲ್ಲಾ ಲಕ್ಷಣಗಳು ಇವೆ.ಅದುವರೆಗೆ ಬೆಳೆಗಾರರು ಇನ್ನು ಕಾಯಬೇಕು ಅಷ್ಟೇ.